15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ. ಕಾರ್ಯದರ್ಶಿ

ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕಾವರಾಡಿಯ ಜಾವೆದ್ ಎಂಬವರು ಬಸವ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಗೋಪಾಲ ದೇವಾಡಿಗ 15ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಈ ಬಗ್ಗೆ ಜಾವೇದ್ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು.
ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಜಾವೇದ್ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಾರ್ಯದರ್ಶಿ ಯನ್ನು ವಶಕ್ಕೆ ಪಡೆದುಕೊಂಡರು.
ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ಮಲ್ಲಿಕಾ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್, ಸತೀಶ್ ಆಚಾರ್ಯ ಪಾಲ್ಗೊಂಡಿದ್ದರು.