ಸಾವು ಆತಂಕ: 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಮಂದಿ ಸಾವು; ಉನ್ನತ ಮಟ್ಟದ ತನಿಖೆಗೆ ಆದೇಶ
ಬರೋಬ್ಬರಿ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಮಂದಿ ಸಾವನ್ನಪ್ಪಿದ್ದಾರೆ. ನಾಂದೇಡ್ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ರೆ ಔರಂಗಾಬಾದ್ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.
ನಾಂದೇಡ್ ಮತ್ತು ಘಾಟಿಯಲ್ಲಿ ಸಂಭವಿಸಿದ ಸಾವುಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇನ್ನು ನಾಂದೇಡ್ ಮತ್ತು ಘಾಟಿಯಲ್ಲಿ ಔಷಧಿ ಕೊರತೆ ಹಾಗೂ ವೈದ್ಯರ ಅಲಭ್ಯತೆಯಿಂದ ಸಾವು ಸಂಭವಿಸಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಶಿಂಧೆ ಅಲ್ಲಗಳೆದಿದ್ದಾರೆ.
ತನಿಖಾ ಸಮಿತಿಯ ವರದಿ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ನಾವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಔರಂಗಾಬಾದ್ನ ನಾಂದೇಡ್ ಮತ್ತು ಘಾಟಿಯಲ್ಲಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ಸಚಿವರು, ಕಾರ್ಯದರ್ಶಿ ಮತ್ತು ಅಧಿಕಾರಿಗಳ ತಂಡವನ್ನು ಕಳುಹಿಸಿದ್ದೇವೆ ಎಂದು ಶಿಂಧೆ ಹೇಳಿದರು.
ಇನ್ನು ನಾಂದೇಡ್ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು, 16 ಶಿಶುಗಳು ಸೇರಿದಂತೆ 35 ಜನರ ಸಾವಿಗೆ ಔಷಧಿಗಳ ಕೊರತೆ ಮತ್ತು ವೈದ್ಯಕೀಯ ಸಿಬ್ಬಂದಿಯ ಅಲಭ್ಯತೆ ಕಾರಣ ಎಂದು ಆರೋಪಿಸಿದ್ದಾರೆ. 70 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅಜ್ಞಾತ ಕಾರಣಗಳಿಂದ ಔಷಧಿ ಪೂರೈಕೆ ಮತ್ತು ವೈದ್ಯರ ನೇಮಕಾತಿ ಸ್ಥಗಿತಗೊಂಡಿದೆ. ಹಲವಾರು ಜನರ ಪ್ರಾಣವನ್ನು ಕಳೆದುಕೊಂಡಿದೆ ಎಂದು ನಾವು ತಿಳಿದುಕೊಂಡಿದ್ದೇವೆ. ರಾಜ್ಯ ಸರ್ಕಾರ ಜವಾಬ್ದಾರಿಯನ್ನು ನಿಗದಿ ಪಡಿಸಿ ವ್ಯವಸ್ಥೆ ಸುಧಾರಿಸಬೇಕು ಎಂದರು.

























