ಮಂಗಳೂರು: ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯ ಸಾವು; ಬಸ್ ಚಾಲಕನಿಗೆ ಶಿಕ್ಷೆ

judgement
17/12/2025

ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: 2016ರಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಚಾಲಕ ಸೈಯದ್ ಇರ್ಫಾನ್ ಅಲಿ ಎಂಬಾತ ತನ್ನ ಖಾಸಗಿ ಬಸ್‌ ಅನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ಮುಂದೆ ನಿಂತಿದ್ದ ಬಸ್‌ ಅನ್ನು ಓವರ್‌ಟೇಕ್ ಮಾಡಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ಪದವು ಕಡೆಯಿಂದ ಪಂಪ್‌ವೆಲ್ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿಗೆ ಬಸ್ ಡಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ಕಂಟೇನರ್ ಲಾರಿ ಪಕ್ಕದಲ್ಲಿದ್ದ ಕಾರಿಗೆ ಗುದ್ದಿತ್ತು. ಇದೇ ಸಮಯದಲ್ಲಿ ಬಸ್ಸಿನ ಎಡಭಾಗದ ಸೀಟಿನಲ್ಲಿ ಕುಳಿತಿದ್ದ ಕವಿತಾ ಎಂಬ ಪ್ರಯಾಣಿಕರು ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಬಸ್ಸಿನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು.

ನ್ಯಾಯಾಲಯದ ತೀರ್ಪು: ಈ ಕುರಿತು ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯ ಅಂದಿನ ನಿರೀಕ್ಷಕರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಜೆಎಂಎಫ್‌ಸಿ (JMFC) 8ನೇ ನ್ಯಾಯಾಲಯದ ನ್ಯಾಯಾಧೀಶರಾದ ಫವಾಜ್ ಪಿ.ಎ. ಅವರು ಚಾಲಕನ ತಪ್ಪು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಆರೋಪಿ ಸೈಯದ್ ಇರ್ಫಾನ್ ಅಲಿಗೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 3,500 ರೂಪಾಯಿ ದಂಡ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕರಾದ ನೇತ್ರಾವತಿ, ಗೀತಾ ರೈ ಸಾಕ್ಷಿ ವಿಚಾರಣೆ ನಡೆಸಿದ್ದರು ಮತ್ತು ಆರೋನ್ ಡಿ’ಸೋಜ ವಿಟ್ಲ ವಾದ ಮಂಡಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version