ಕೆಎಸ್ ಆರ್ ಟಿಸಿ ಬಸ್—ಶಾಲಾ ವಾಹನ ನಡುವೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ - Mahanayaka
5:26 AM Tuesday 8 - September 2026

ಕೆಎಸ್ ಆರ್ ಟಿಸಿ ಬಸ್—ಶಾಲಾ ವಾಹನ ನಡುವೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

rayachur
06/09/2024

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್ಆರ್ಟಿಸಿ ಬಸ್–ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ನಗರದ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ಈ ವೇಳೆ ಮಾತನಾಡಿದ ಅವರು ಶಾಲಾ ಮಕ್ಕಳ ವಾಹನ ಅಪಘಾತವು ನೋವುಂಟು ಮಾಡಿದೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರು ಬಾಲಕರ ಕುಟುಂಬಕ್ಕೆ ಸರ್ಕಾರ ತಲಾ 5ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಇನ್ನು ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ 3ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ವಿದ್ಯಾರ್ಥಿನಿ ಮಧುಶ್ರೀ ಹಾಗೂ ಮಂಜುನಾಥ ಸ್ಥಿತಿ ಗಂಭೀರವಾಗಿದೆ. ಓರ್ವ ಬಾಲಕಿಗೆ ತಲೆಗೆ ಬಲವಾಗಿ ಪೆಟ್ಟು ಬಿದ್ದಿದೆ. ಬಾಲಕಿಗೆ ಬೆಂಗಳೂರಿನ ನ್ಯೂರೋ ಸರ್ಜನ್ ಕನ್ಸಲ್ಟ್ ಮಾಡಿದ್ದೇವೆ. ವಿದ್ಯಾರ್ಥಿ ನಂದೀಶ್ ನ ಎರಡು ಕೈ ಗಾಯ ಆಗಿದೆ. ಘಟನೆಗೆ ಕಾರಣವೇನೆಂದು ತಿಳಿಯಲು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸ್ ಇಲಾಖೆ ಎಫ್ಐಆರ್ ಮಾಡಿದೆ, ವರದಿ ಸಲ್ಲಿಸಲು ಹೇಳಿದ್ದೇನೆ. ಎಲ್ಲ ಶಾಲೆಗಳ ಬಸ್ನ ಫಿಟ್ನೆಸ್ ಹಾಗೂ ಚಾಲಕರ ಫಿಸಿಕಲ್ ಫಿಟ್ನೆಸ್, ಲೈಸೆನ್ಸ್ ಬಗ್ಗೆ ಆರ್ಟಿಒ ದಿಂದ ವರದಿ ಪಡೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಕುರ್ಡಿ ಗ್ರಾಮಕ್ಕೆ ಸಚಿವರ ಭೇಟಿ, ಪರಿಹಾರ ಚೆಕ್ ವಿತರಣೆ: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್ಆರ್ಟಿಸಿ ಬಸ್- ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು ಕುರ್ಡಿ ಗ್ರಾಮಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ, ಮಕ್ಕಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು.

ಕುರ್ಡಿ ಗ್ರಾಮದ ಸಮರ್ಥ (7), ಶ್ರೀಕಾಂತ್ (12) ಮೃತ ಮಕ್ಕಳು ಎರಡು ಕುಟುಂಬಗಳಿಗೆ ಐದು ಲಕ್ಷ ಚೆಕ್ ವಿತರಣೆ ಮಾಡಿದರು. ನಂತರ ಮಾತನಾಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಬಂದಿದ್ದೇವೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ. ಗಾಯಗೊಂಡವರಿಗೆ 3ಲಕ್ಷ ರೂ.ಗಳನ್ನು ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಸರ್ಕಾರವೇ ಚಿಕಿತ್ಸೆಯ ವೆಚ್ಚ ಭರಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಶಾಸಕರಾದ ಮಾನವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ, ಸಿಂಧನೂರು ಕ್ಷೇತ್ರದ ಹಂಪನಗೌಡ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಎಮ್.ಪುಟ್ಟಮಾದಯ್ಯ, ರಾಯಚೂರು ಸಹಾಯಕ ಆಯುಕ್ತರಾದ ಮೈಬೂಬಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮೈಬೂಬು ಜಿಲಾನಿ, ಜಿಲ್ಲಾ ರಿಮ್ಸ್ ನಿರ್ದೇಶಕ ರಮೇಶ, ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಿಮ್ಸ್ ವೈದ್ಯಾಧಿಕಾರಿಗಳು ಸೇರದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti