ಗೆಳೆಯನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಗದಗ ಮೂಲದ ಅಭಿಷೇಕ್ (27) ಮೃತಪಟ್ಟ ದುರ್ದೈವಿ. ಅಭಿಷೇಕ್ ತನ್ನ ಸ್ನೇಹಿತನ ಮದುವೆಗಾಗಿ ಬನ್ನೂರು ಸಮೀಪದ ಭದ್ರಾ ರೆಸಾರ್ಟ್ನಲ್ಲಿ ತಂಗಿದ್ದರು. ನಿನ್ನೆ ಸಂಜೆ ಭದ್ರಾ ನದಿಗೆ ಇಳಿದಿದ್ದ ಸಂದರ್ಭದಲ್ಲಿ ಅವರು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಬಾಳೆಹೊನ್ನೂರು ಪೊಲೀಸರು ಹಾಗೂ ಸ್ಥಳೀಯರು ಸೇರಿ ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ರಾತ್ರಿಯಾದ ಕಾರಣ ಮತ್ತು ಬೆಳಕಿನ ಕೊರತೆಯಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಇಂದು ಮುಂಜಾನೆಯಿಂದಲೇ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜು ತಜ್ಞರು ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದು, ಅಂತಿಮವಾಗಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬಸ್ಥರಲ್ಲಿ ಈ ಸಾವು ಭರಿಸಲಾಗದ ಶೋಕವನ್ನು ತಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























