ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ
ಶಿವಮೊಗ್ಗ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಹಲವು ನಾಯಕರು ಬೇಡಿಕೆ ಇಡುವುದು ಸಹಜ. ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರಿಗೆ ಯಾವ ಖಾತೆಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ಗೆ ಚೆನ್ನಾಗಿ ತಿಳಿದಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ನಾನು ಅದನ್ನು ಶಿರಸಾವಹಿಸಿ ಪಾಲಿಸುತ್ತೇನೆ” ಎಂದು ಹೇಳಿದರು.
ಪ್ರಸ್ತುತ ಶಿಕ್ಷಣ ಖಾತೆಯು ಮುಖ್ಯಮಂತ್ರಿಗಳ ಬಳಿಯೇ ಇದೆ. ಶಿಕ್ಷಣ ಸಚಿವರಿಲ್ಲ ಎಂಬ ಕಾರಣಕ್ಕೆ ಇಲಾಖೆಯ ಯಾವುದೇ ಕಾರ್ಯಗಳು ಸ್ಥಗಿತಗೊಂಡಿವೆ ಅಥವಾ ಕುಂಠಿತವಾಗಿವೆ ಎಂದು ಹೇಳುವುದು ಸರಿಯಲ್ಲ. ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಮಧು ಬಂಗಾರಪ್ಪ ಸಮರ್ಥಿಸಿಕೊಂಡರು. ಅಲ್ಲದೆ, ನೆರೆರಾಜ್ಯ ತೆಲಂಗಾಣದಲ್ಲಿಯೂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಬಳಿಯೇ ಶಿಕ್ಷಣ ಖಾತೆ ಇದ್ದು, ಅಲ್ಲಿ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಇದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆ (KPS) ಯೋಜನೆ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಾಗಿದೆ. ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬುದು ಕೇವಲ ವದಂತಿಯಷ್ಟೇ. ಶಿವಮೊಗ್ಗದಿಂದಲೇ ಈ ಯೋಜನೆಗೆ ಮತ್ತಷ್ಟು ವೇಗ ನೀಡುವ ಕೆಲಸ ಮುಂಬರುವ ದಿನಗಳಲ್ಲಿ ನಡೆಯಲಿದೆ. ಸರ್ಕಾರದ ಬದಲಾವಣೆಯ ಸಂದರ್ಭದಲ್ಲಿ ಉಂಟಾದ ಕೆಲವು ಆಡಳಿತಾತ್ಮಕ ವ್ಯತ್ಯಾಸಗಳಿಂದಾಗಿ ಕೆಲವು ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆಯೇ ಹೊರತು, ಸರ್ಕಾರದ ಯಾವುದೇ ಜನಪರ ಯೋಜನೆಯೂ ರದ್ದಾಗುವುದಿಲ್ಲ ಎಂದು ಮಾಜಿ ಸಚಿವರು ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























