ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ: ಸಚಿವ ಯು.ಟಿ. ಖಾದರ್ ಭರವಸೆ
ಮಂಗಳೂರು: ನಗರದ ಪುರಭವನದ ಬಳಿ ವರ್ಷಗಳಿಂದ ನಡೆಯುತ್ತಿರುವ ‘ಸಂಡೆ ಬಜಾರ್’ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.
ಇತ್ತೀಚೆಗೆ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ಅಧಿಕಾರಿಗಳು ಕೈಗೊಂಡಿದ್ದ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘವು ಸಚಿವರಿಗೆ ಮನವಿ ಸಲ್ಲಿಸಿತ್ತು. ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.
ಸಂಡೆ ಬಜಾರ್ ವಾರಕ್ಕೊಮ್ಮೆ ಮಾತ್ರ ನಡೆಯುವ ವ್ಯಾಪಾರವಾಗಿದೆ. ಹೀಗಾಗಿ ವ್ಯಾಪಾರಿಗಳ ಮೇಲೆ ಏಕಾಏಕಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ. ವ್ಯಾಪಾರದಲ್ಲಿ ಏನಾದರೂ ಸಣ್ಣಪುಟ್ಟ ಲೋಪದೋಷಗಳು ಅಥವಾ ಸಮಸ್ಯೆಗಳಿದ್ದರೆ, ಅದನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೇ ಹೊರತು ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು ಎಂದರು.
ಸಭೆಗೆ ಸೂಚನೆ:
ಮಹಾನಗರ ಪಾಲಿಕೆ ಆಯುಕ್ತರಿಗೆ ದೂರವಾಣಿ ಮೂಲಕ ಕರೆ ಮಾಡಿದ ಸಚಿವರು, ಶೀಘ್ರದಲ್ಲೇ ತಮ್ಮ ಸಮ್ಮುಖದಲ್ಲಿ ಅಧಿಕಾರಿಗಳು ಮತ್ತು ವ್ಯಾಪಾರಿಗಳ ಪ್ರತಿನಿಧಿಗಳ ಸಭೆಯನ್ನು ನಿಗದಿಪಡಿಸುವಂತೆ ನಿರ್ದೇಶನ ನೀಡಿದರು.
ಈ ಮಹತ್ವದ ಸಭೆಯಲ್ಲಿ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಪ್ರಮುಖ ನಾಯಕರಾದ ಸಂತೋಷ್ ಆರ್.ಎಸ್., ಹಂಝ ಮೊಹಮ್ಮದ್, ಎಂ.ಎನ್. ಶಿವಪ್ಪ, ವಿಜಯ್ ಜೈನ್, ಪಕೀರ ನಾಯ್ಕ್, ಸಿಕಂದರ್ ಬೇಗ್, ಮುತ್ತುರಾಜ್, ಗದಿಗಪ್ಪ, ಶಿವಾನಂದ ಹಾಗೂ ಅಬ್ದುಲ್ ಕಾದರ್ ವಾಮಂಜೂರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























