ಅತ್ತಿಬೆಲೆ ಪ್ರಕರಣ: ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚನೆ - Mahanayaka
12:50 AM Saturday 23 - August 2025

ಅತ್ತಿಬೆಲೆ ಪ್ರಕರಣ: ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚನೆ

siddaramaiah
10/10/2023


Provided by

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ ನೀಡಿದರು.ಅಲ್ಲದೇ ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚಿಸಿದರು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್‌ ಇನ್ಸ್‌ಪೆಕ್ಟರ್‌ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್‌ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದರು.

ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.

ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್‌ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೇಯ ಗಮನಕ್ಕೆ ತರಲಾಯಿತು.

ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.

ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ.  ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ.

ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚಿಸಿದರು.

ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದರು.

ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಲು ಸೂಚಿಸಿದರು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಿದರು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಲು ಸೂಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಡಿಜಿಪಿ ಅಲೋಕ್‌ ಮೋಹನ್‌, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ