ಮಂಗಳೂರು: ಎಟಿಎಂ ಕೊಠಡಿಯಲ್ಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು
ಮಂಗಳೂರು: ನಗರದ ಕದ್ರಿ ಬಳಿಯ ಎಟಿಎಂ ಕೊಠಡಿಯೊಂದರಲ್ಲಿ ವ್ಯಕ್ತಿಯೊಬ್ಬರು ದಿಢೀರನೆ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕಾಂಞಂಗಾಡ್ ನಿವಾಸಿ ಬಾಲಕೃಷ್ಣ ಎಚ್. (53) ಮೃತಪಟ್ಟ ದುರ್ದೈವಿ. ಇವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ (SCDCC) ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿ ಬಾಲಕೃಷ್ಣ ಅವರು ಹಣ ಹಿಂಪಡೆಯಲೆಂದು ಕದ್ರಿಯ ಎಟಿಎಂ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಅವರು ಅಲ್ಲಿಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅವರು ಕೆಳಗೆ ಬೀಳುವ ರಭಸಕ್ಕೆ ಎಟಿಎಂ ಕೊಠಡಿಯ ಗಾಜು ಒಡೆದು, ಅವರ ದೇಹಕ್ಕೆ ತಗುಲಿ ಗಾಯಗಳಾಗಿದ್ದವು ಎನ್ನಲಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕೃಷ್ಣ ಅವರು ತೀವ್ರ ಹೃದಯಾಘಾತದಿಂದ (Heart Attack) ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ ಎಂದು ಕದ್ರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























