ಚಿಕ್ಕಮಗಳೂರು: ಕರ್ತವ್ಯದ ವೇಳೆ ಹೃದಯಾಘಾತ: ಪೊಲೀಸ್ ಪೇದೆ ನಿಧನ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೊಬ್ಬರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಸೈನಿಕರೂ ಆಗಿದ್ದ ಸತೀಶ್ (53) ಮೃತಪಟ್ಟ ದುರ್ದೈವಿ.
ಶೃಂಗೇರಿ ಠಾಣೆಯ 112 ಇ.ಆರ್.ಎಸ್. (ERS) ವಿಭಾಗದಲ್ಲಿ ಸತೀಶ್ ಅವರು ಸೇವೆ ಸಲ್ಲಿಸುತ್ತಿದ್ದರು. ಇಂದು ಕೊಪ್ಪ ತಾಲೂಕಿನ ಹರಿಹರಪುರ ಬಳಿ ಕರ್ತವ್ಯದಲ್ಲಿದ್ದಾಗ ಅವರಿಗೆ ದಿಢೀರ್ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಸತೀಶ್ ಅವರು ಮೂಲತಃ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದವರು. ಇವರು ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಕಳೆದ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಸಾರ್ವಜನಿಕ ಸೇವೆ ಮಾಡುತ್ತಿದ್ದರು.
ಕರ್ತವ್ಯನಿರತ ಪೊಲೀಸ್ ಪೇದೆಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹರಿಹರಪುರ ಹಾಗೂ ಶೃಂಗೇರಿ ಭಾಗದಲ್ಲಿ ಈ ಘಟನೆಯಿಂದಾಗಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























