ಕಾಂಗ್ರೆಸ್ ಮತ್ತು ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ: ಛತ್ತೀಸ್ ಗಢದಲ್ಲಿ ಪ್ರಧಾನಿ ಮೋದಿ ಹೊಸ ವಾದ..!

ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ಮತದಾರರಿಗೆ ದೊಡ್ಡ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಿಜೆಪಿ ಗೆದ್ದರೆ ಬಡವರು ಮತ್ತು ದೀನ ದಲಿತರಿಗೆ ಹೆಚ್ಚಿನ ಮನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಛತ್ತೀಸ್ ಗಢದ ಕಂಕೇರ್ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಿಎಂ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ, “ಕಾಂಗ್ರೆಸ್ ಮತ್ತು ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವಿಲ್ಲ” ಎಂದು ಹೇಳಿದರು. “ಕೇಂದ್ರ ಸರ್ಕಾರದಲ್ಲಿ ಲಕ್ಷಾಂತರ ಕೋಟಿ ರೂ.ಗಳ ಹಗರಣಗಳನ್ನು ಮಾಡುವ ಮೂಲಕ ಕಾಂಗ್ರೆಸ್ ತನ್ನ ಬೊಕ್ಕಸವನ್ನು ಕಪ್ಪು ಹಣದಿಂದ ತುಂಬಿದೆ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಇಲ್ಲ, ಹೀಗಾಗಿ ಕಾಂಗ್ರೆಸ್ ಖಜಾನೆ ಖಾಲಿಯಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲ ಅಲ್ಲಿನ ಜನರನ್ನು ಲೂಟಿ ಮಾಡುತ್ತಿದೆ. ಎಂದು ಪ್ರಧಾನಿ ಹೇಳಿದರು. ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರದ ವಿರುದ್ಧ ಪರೋಕ್ಷ ದಾಳಿ ನಡೆಸಿದ ಪ್ರಧಾನಿ, “ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ” ಎಂದು ಹೇಳಿದರು.