ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ವೇಳೆ ದಲಿತರ ಮೇಲೆ ಲಾಠಿ ಚಾರ್ಜ್! - Mahanayaka

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ವೇಳೆ ದಲಿತರ ಮೇಲೆ ಲಾಠಿ ಚಾರ್ಜ್!

daliths protest
11/12/2022


Provided by

ಬೆಂಗಳೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಜನರ ಮೇಲೆ ಲಾಠಿ ಬೀಸಿ ಪೊಲೀಸರು ಬಂಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರತಿಭಟನಾ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಅವರು ಆಗಮಿಸಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹೋರಾಟ ಸಮಿತಿ ಪ್ರಮುಖರು ಸೇರಿದಂತೆ ಸುಮಾರು 400 ಮಂದಿಯನ್ನು ಪೊಲೀಸರಿ ಬಂಧಿಸಿದ್ದು, ಉಳಿದವರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಲಾಠಿ ಚಾರ್ಜ್ ವೇಳೆ ಹೋರಾಟಗಾರ ಕರಿಯಪ್ಪ ಗುಡಿಮನಿ ಅವರ ತಲೆಗೆ ಬಲವಾದ ಏಟು ಬಿದ್ದಿದ್ದು, ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರದ ಈ ದೌರ್ಜನ್ಯವನ್ನು ಖಂಡಿಸಿ, ಡಿಸೆಂಬರ್ 19ರಂದು ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟ ಆರಂಭವಾಗಲಿದೆ.

ಸಿದ್ದರಾಮಯ್ಯ ಖಂಡನೆ:

ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ಹಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ‌ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದಿದ್ದಾರೆ.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ