9:39 AM Saturday 7 - February 2026

ಜಲಮಂಡಳಿ ತೆಗೆದಿಟ್ಟ ಗುಂಡಿಗೆ ಬಿದ್ದು 25 ವರ್ಷದ ಬೈಕ್ ಸವಾರ ಸಾವು

Janakpuri
07/02/2026

ಹೊಸ ದೆಹಲಿ: ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ದೆಹಲಿ ಜಲ ಮಂಡಳಿ (DJB) ಅಗೆದಿದ್ದ ಆಳವಾದ ಗುಂಡಿಗೆ ಬೈಕ್ ಸಮೇತ ಬಿದ್ದು 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಘಟನೆಯ ವಿವರ: ಮೃತನನ್ನು ಕಮಲ್ ಧಿಯಾನಿ ಎಂದು ಗುರುತಿಸಲಾಗಿದೆ. ಈತ ಖಾಸಗಿ ಬ್ಯಾಂಕ್ ಒಂದರಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾತ್ರಿ 11:53ಕ್ಕೆ ತನ್ನ ಸಹೋದರನಿಗೆ ಕರೆ ಮಾಡಿದ್ದ ಕಮಲ್, ಇನ್ನೊಂದು ಸ್ವಲ್ಪ ಹೊತ್ತಿನಲ್ಲಿ ಮನೆ ತಲುಪುವುದಾಗಿ ತಿಳಿಸಿದ್ದ. ಆದರೆ ಮನೆಗೆ ಬಾರದಿದ್ದಾಗ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಮುಂಜಾನೆ ಜನಕಪುರಿ ಬಳಿಯ ಕೆಸರು ತುಂಬಿದ ಆಳವಾದ ಗುಂಡಿಯಲ್ಲಿ ಕಮಲ್ ಶವ ಮತ್ತು ಆತನ ಬೈಕ್ ಪತ್ತೆಯಾಗಿದೆ.

ರಾಜಕೀಯ ಕೆಸರೆರಚಾಟ: ಈ ಘಟನೆ ದೆಹಲಿಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, “ಇದು ಕೇವಲ ಅಪಘಾತವಲ್ಲ, ಇದು ಕೊಲೆ. ನೋಯ್ಡಾ ಘಟನೆಯಿಂದಲೂ ಬಿಜೆಪಿ ಸರ್ಕಾರ ಏನನ್ನೂ ಕಲಿತಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ” ಎಂದು ಕಿಡಿಕಾರಿದ್ದಾರೆ.

 

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸಚಿವರು ತನಿಖೆಗೆ ಆದೇಶಿಸಿದ್ದಾರೆ. ದೆಹಲಿ ಜಲ ಮಂಡಳಿಯು ಈ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. “ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲಾಗುವುದು” ಎಂದು ಸಚಿವರು ಭರವಸೆ ನೀಡಿದ್ದಾರೆ.

ಆದರೆ, ಘಟನಾ ಸ್ಥಳದಲ್ಲಿ ಬ್ಯಾರಿಕೇಡ್‌ ಗಳು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ದೆಹಲಿ ಜಲ ಮಂಡಳಿ ಪ್ರತಿಪಾದಿಸಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version