ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ಚುನಾವಣಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ನಿಗಾ ಇರಿಸಲು ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಶ್ರೀಧರ್ ಹೆಗಡೆ ಅವರು ಮಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ಇನ್ನು ಅವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ. ವೈಯಕ್ತಿಕ ಕಾರಣದ ಹಿನ್ನೆಲೆ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth