2025ಕ್ಕೆ ಜಿಲ್ಲೆಗೆ ಹರಿಯಲಿದೆ ಎತ್ತಿನಹೊಳೆ ನೀರು: ಸಚಿವ ಪರಮೇಶ್ವರ - Mahanayaka
3:08 AM Friday 11 - September 2026

2025ಕ್ಕೆ ಜಿಲ್ಲೆಗೆ ಹರಿಯಲಿದೆ ಎತ್ತಿನಹೊಳೆ ನೀರು: ಸಚಿವ ಪರಮೇಶ್ವರ

g parameshwar
05/09/2024

ತುಮಕೂರು: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು.

ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು.

ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ ಸ್ಥಿತಿ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ. ಇದೆಲ್ಲವು ಕ್ರೂಡಿಕ್ರುತವಾಗಿ ಒಂದುಕಡೆ ಬಂದರೆ 24 ಟಿಎಂಸಿ ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹ 12,912.36 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹ 23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯ 24.01 ಟಿಎಂಸಿ ನೀರಿನಲ್ಲಿ ಜಿಲ್ಲೆಗೆ 5.470 ಟಿಎಂಸಿ ಹಂಚಿಕೆ ಮಾಡಲಾಗಿದೆ. 2.294 ಟಿಎಂಸಿ ಕುಡಿಯುವ ನೀರಿಗೆ, 3.446 ಸಣ್ಣನೀರಾವರಿ 113 ಕೆರೆಗಳ ಭರ್ತಿಗೆ ಅವಕಾಶವಿದೆ. ಒಟ್ಟು 3117 (76 ಗುಂಟೆ) ಎಕರೆ ಜಾಗದಲ್ಲಿ 2022 ಎಕರೆ ಭೂಮಿಗೆ ಹಣ ಮಂಜೂರಾಗಿ, ಭೂಸ್ವಾಧೀನವಾಗಿದೆ. 80ರಷ್ಟು ಭೂಸ್ವಾಧೀನಗೊಂಡಿದೆ. ರೂ 1200 ಕೋಟಿ ಬಿಡುಗಡೆಯಾಗಿದೆ. 2025ಕ್ಕೆ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ‌. ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 0.20 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ತಿಳಿಸಿದರು.

ರೂ. 1200 ಕೋಟಿಗಳಲ್ಲಿ ರೂ 448 ಕೋಟಿ ಹಂಚಿಯಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ 434 ಕೋಟಿ ಬಾಕಿ ಇದೆ. ರೂ 397 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡತೆ ಹಂತಹಂತವಾಗಿ ಹಣ ಮಂಜೂರು ಮಾಡಲಾಗುವುದು‌ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 150 ಕಿ.ಮೀ.ಕೆನಾಲ್:

ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್‌ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ ಎಂದರು.

ಭದ್ರಾ ಮೇಲ್ದಂಡೆ: ಮೊದಲನೆ ಯೋಜನೆ ಮಾಡಿದಾಗ ಕೊರಟಗೆರೆ ತಾಲ್ಲೂಕಿನ ಬೈಲಗೊಂಡನಹಳ್ಳಿ 2500 ಸಾವಿರ ಎಕರೆ ಭೂಮಿಯನ್ನು, ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ 2500 ಭೂಮಿ ಇದೆ.

ದೊಡ್ಡಬಳ್ಳಾಪುರ ಜಾಗವು ಅಲ್ಲಿನ ಭೂಮಿಯ ಮೌಲ್ಯಕ್ಕೆ ತೆಗೆದುಕೊಳ್ಳುತ್ತದೆ. ತುಮಕೂರಿನಲ್ಲಿ 12 ಲಕ್ಷ ರೂ. ತೆಗೆದುಕೊಳ್ಳುತ್ತದೆ. ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ನನ್ನನ್ನು ಸಚಿವ ಸಂಪುಟ ಉಪ ಸಮಿತಿ ಸದಸ್ಯನನ್ನಾಗಿ ಮಾಡಿತು. ತದನಂತರ ಬಂದ ಸರ್ಕಾರ ಯೋಜನೆಯನ್ನು ಅಲ್ಲಿಗೆ ಕೈಬಿಟ್ಟರು. ಸಧ್ಯ ಬೈಲಗೊಂಡಲಹಳ್ಳಿಯಲ್ಲಿ ಯಾವುದೇ ರಿಸರ್ವ್ ಭೂಮಿ ಇರುವುದಿಲ್ಲ. ಈ ಹಿಂದೆ ಭೂಮಿ ಕೊಡುವುದಾದರೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ರೈತರೊಂದಿಗಿನ ಸಭೆಯಲ್ಲಿ ತಿಳಿಸಿದ್ದೆ. ಇದಕ್ಕೆ ರೈತರು ನಿರಾಕರಿಸಿದ್ದರು ಎಂದು ಹೇಳಿದರು.

ಶೇ.64ರಷ್ಟು ಕೆನಾಲ್ ಕಾಮಗಾರಿ ಪೂರ್ಣ:

ಎತ್ತಿನಹೊಳೆ ಯೋಜನೆಯ ಕೆನಾಲ್ ದಾರಿ ತಿಪಟೂರು 43 ಕಿ.ಮೀ, ಚಿಕ್ಕನಾಯಕನಹಳ್ಳಿ 12 ಕಿ.ಮೀ, ತುರುವೆಕೆರೆ 1 ಕಿ.ಮೀ, ಗುಬ್ಬಿ 41 ಕಿ.ಮೀ, ತುಮಕೂರು ಗ್ರಾ 31, ಕೊರಟಗೆರೆ 19, ಮಧುಗಿರಿ (ಫೀಡರ್ ಕೆನಾಲ್) 40 ಕಿ.ಮೀ, ಪಾವಘಡ 42 ಕಿ.ಮೀ. ಕೆನಾಲ್ ಹಾದುಹೋಗಲಿದೆ. ಜಿಲ್ಲೆಯಲ್ಲಿ ಶೇ. 64ರಷ್ಟು ಮುಖ್ಯ ಕೆನಾಲ್ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಕೊರಟಗೆರೆ–ತುಮಕೂರು ಎಪಿಎಂಸಿ ಅವ್ಯವಹಾರ ಕುರಿತು: ಎಪಿಎಂಸಿ ಮಳಿಗೆಗಳನ್ನು ಹಂಚಿಕೆ‌ ಮಾಡಲು ಸರ್ಕಾರವು ನಿಯಮಗಳನ್ನು ಮಾಡಿದೆ. ನಿಯಮಗಳ ಪ್ರಕಾರವೇ ಹಂಚಿಕೆ ಮಾಡಲಾಗುವುದು‌. ನಿಯಮ ಮೀರಿ ಹಂಚಿಕೆ ಮಾಡಿರುವುದು ಕಂಡುಬಂದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು‌‌. ಹತ್ತು ವರ್ಷಗಳ ಹಿಂದೆ ಎಪಿಎಂಸಿ ಮಳಿಗೆಗಳು ಹಂಚಿಕೆಯಾಗಿವೆ‌. ಆಗ ಏನೆಲ್ಲ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಹೇಮಾವತಿ: ಜಿಲ್ಲೆಗೆ 22 ಜುಲೈ 2024 ರಿಂದ 25 ಆಗಸ್ಟ್ 2024ರವರೆಗಡ 3915 ಎಂಸಿಎಫ್‌ಟಿ ನೀರು ಬಂದಿದೆ. ಪ್ರತಿ ದಿನ 1500 ಕ್ಯೂಸೆಕ್ ನೀರು ಬರುತ್ತಿದ್ದು, ಕುಣಿಗಲ್‌ವರೆಗು ಹೋಗುತ್ತಿದೆ. ಬುಗುಡನಹಳ್ಳಿ ಕೆರೆಯಲ್ಲಿ 290 ಎಂಸಿಎಫ್‌ ಟಿ ನೀರು ಸಂಗ್ರಹವಿದೆ. ಸಣ್ಣನೀರಾವರಿ 27 ಕೆರೆಗಳು ಭರ್ತಿಯಾಗಿವೆ. ಆ ಭಾಗದಲ್ಲಿ ಮಳೆಯಾಗುತ್ತಿರುವು ಹಿನ್ನೆಲೆಯಲ್ಲಿ ಇನ್ನು ನೀರು ಬರಲಿದೆ‌ ಎಂದು ಹೇಳಿದರು.

ಸಿ.ಟಿ.ರವಿಗೆ ತಿರುಗೇಟು:

ನಾವು ಎತ್ತಿನಹೊಳೆ ಯೋಜನೆ ಪೂರ್ಣಗೊಂಡಿದೆ ಎಂದು ಎಲ್ಲಿಯೂ ಹೇಳಿಲ್ಲ. ಯೋಜನೆಯ 1ನೇ ಹಂತ ಕಾಮಗಾರಿ ಪೂರ್ಣಗೊಂಡಿದೆ. ಸಿ.ಟಿ.ರವಿ ಡಬಲ್ ಗ್ಯಾಜ್ಯುಯೇಟ್ ಪದವೀಧರರು. ಅವರನ್ನು ತಪ್ಪಿಸಿ ಮಾಡಲಾಗುವುದಿಲ್ಲ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler