ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ!

gadaga family
19/04/2024

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನವೀಯವಾಗಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ.

ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ (27), ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರಾಗಿದ್ದಾರೆ.

ಕಾರ್ತಿಕ್​ ಅವರ ಮದುವೆ ತಯಾರಿ ಸಂಬಂಧ ಏಪ್ರಿಲ್​ 17 ರಂದು ಸಂಬಂಧಿಕರಾದ ಪರಶುರಾಮ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಪ್ಪಳದಿಂದ ಗದಗ ನಗರಕ್ಕೆ ಆಗಮಿಸಿದ್ದರು. ಗುರುವಾರ ರಾತ್ರಿ ಆಕಾಂಕ್ಷಾ ಹುಟ್ಟು ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದರು. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.

ತಡ ರಾತ್ರಿ ಪರಶುರಾಮ ಕುಟುಂಬಸ್ಥರು ಮಲಗಿದ್ದ ಕೋಣೆಯ ಗಾಜಿನ ಕಿಟಕಿ ಒಡೆದು ದುಷ್ಕರ್ಮಿಗಳು ಒಳನುಗ್ಗಿದ್ದಾರೆ. ಬಳಿಕ ಮೂವರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದೇ ವೇಳೆ ಕೆಳಗಿನ ಕೋಣೆಯಲ್ಲಿದ್ದ ಕಾರ್ತಿಕ್ ಬಾಕಳೆ ಕಿರುಚಾಟ ಕೇಳಿ ಮೇಲೆ ಹೋಗಿ ನೋಡಿದ್ದು, ಈ ವೇಳೆ ಅವರನ್ನೂ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನಂತರ ಮಾಲಿಕ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಿಲನ್ನು ದುಷ್ಕರ್ಮಿಗಳು ತಟ್ಟಿದ್ದಾರೆ. ಆದರೆ, ಅವರು ಬಾಗಿಲು ತೆಗೆಯದೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಶ್ವಾನದಳ, ವಿಧಿವಿಜ್ಞಾನ ಪ್ರಯೋಗಾಲಯ ತಂಡ, ಎಸ್ಪಿ ಬಿಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version