ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆ!
ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆ ತೊರೆದ ಒಂದೇ ಕುಟುಂಬದ ನಾಲ್ವರು ಸದಸ್ಯರು ಕಳೆದ 8 ದಿನಗಳಿಂದ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ.
ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣಾ (3) ನಾಪತ್ತೆಯಾದವರು ಎಂದು ಗುರುತಿಸಲಾಗಿದೆ.
ಮೂಲತಃ ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದ ನಿವಾಸಿಯಾದ ರಮೇಶ್ ಕುಮಾರ್, ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡುವ ವ್ಯವಹಾರ ನಡೆಸುತ್ತಿದ್ದರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಹೂಡಿಕೆ ಮಾಡಿದ್ದ ಅವರಿಗೆ ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ ಉಂಟಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಆಗಸ್ಟ್ 12ರಂದು ತಮ್ಮ ಪೋಷಕರಿಗೆ ಕರೆ ಮಾಡಿ ‘ಬೆಂಗಳೂರಿಗೆ ಹೋಗಿ ಬರುವುದಾಗಿ’ ಹೇಳಿದ್ದ ರಮೇಶ್, ತಮ್ಮ ಕಾರು, ಬೈಕ್ ಮತ್ತು ಮೊಬೈಲ್ ಫೋನ್ ಗಳನ್ನು ಮನೆಯಲ್ಲಿಯೇ ಬಿಟ್ಟು, ಆಟೋದಲ್ಲಿ ಕೆಎಸ್ ಆರ್ ಟಿಸಿ (KSRTC) ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ.
ನಾಲ್ವರೂ ಮೊಬೈಲ್ ಫೋನ್ ಬಿಟ್ಟು ಹೋಗಿದ್ದು, ಎಂಟು ದಿನಗಳಾದರೂ ಯಾವುದೇ ಸಂಪರ್ಕಕ್ಕೆ ಸಿಗದ ಕಾರಣ ಹಾಗೂ ಸಂಬಂಧಿಕರ ಮನೆಗಳಿಗೂ ಹೋಗದಿರುವುದರಿಂದ ಕುಟುಂಬಸ್ಥರು ತೀವ್ರ ಆತಂಕಗೊಂಡಿದ್ದಾರೆ.
ಈ ಸಂಬಂಧ ರಮೇಶ್ ಅವರ ತಾಯಿ ವಿದ್ಯಾನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಕುಟುಂಬಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























