ಗೋರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ದಂಧೆ: ಗ್ಯಾಂಗ್ ಅರೆಸ್ಟ್

go rakshak dandha
26/06/2025

ಮೈಸೂರು: ಗೋ ರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆಗಿಳಿದಿದ್ದ ಆರೋಪದಡಿಯಲ್ಲಿ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಎಂಬಾತನನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ಈತನ  ಜೊತೆಗೆ ಮಹಿಳೆ ಸೇರಿದಂತೆ 7 ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 2 ಕಾರುಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಈ ಘಟನೆ ನಡೆದಿದೆ. ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರು ಸಂರಕ್ಷಣೆ ಮಾಡುವ ನೆಪದಲ್ಲಿ ಈ ಗ್ಯಾಂಗ್ ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ಮಾಡುತ್ತಿತ್ತು.

ತಾಲೂಕಿನ ರತ್ನಪುರಿಯ ಕಿರಣ್ ಬುಧವಾರ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ. ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ತಾಲೂಕಿನ ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ ಗೆ ಬೆದರಿಸಿ 25 ಸಾವಿರ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದನಾದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ. ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಗಮನಿಸಿ ಆರೋಪಿಗಳ ವಿರುದ್ಧ ತಿರುಗಿ ಬಿದ್ದು, ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಗೋ ರಕ್ಷಣೆಯನ್ನೇ ದಂಧೆ ಮಾಡಿಕೊಂಡು ಹಣ ವಸೂಲಿ ಮಾಡುತ್ತಿರುವ ಕೃತ್ಯ ಬಯಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version