ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ: ವಿವಿಧೆಡೆಗಳಲ್ಲಿ ಅನಾಹುತ

ದಕ್ಷಿಣ ಕನ್ನಡ/ಮಂಗಳೂರು: ಭಾರೀ ಮಳೆ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ನಿರಂತರವಾಗಿ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಪಂಪ್ ವೆಲ್ ನಲ್ಲಿ ಪ್ರವಾಹ:
ಮಂಗಳೂರು ನಗರದ ಪಂಪ್ ವೆಲ್ ಸೇತುವೆ ಬಳಿ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಗೆ ರಾಜಕಾಲುವೆ ಮೇಲೆ ನೀರು ಹರಿದು ರಸ್ತೆಗೆ ನುಗ್ಗಿದೆ. ಇದರಿಂದಾಗಿ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲಾಗದೇ ಪರದಾಡುತ್ತಿದ್ದಾರೆ. 2 ಗಂಟೆಯಿಂದ ನಿರಂತರವಾಗಿ ಮಳೆ ಮುಂದುವರಿದಿದೆ. ಕೆಲವೇ ಕ್ಷಣಗಳ ಬಿಡುವು ನೀಡುತ್ತಿರುವ ಮಳೆ ಮತ್ತೆ ಮೋಡ ಕಟ್ಟಿಕೊಂಡು ಭಾರೀ ಗಾಳಿಯೊಂದಿಗೆ ಧಾರಾಕಾರವಾಗಿ ಸುರಿಯುತ್ತಿದೆ.
ಇನ್ನೂ ಅಡ್ಯಾರ್ ಗ್ರಾಮದ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಚರಂಡಿಯಲ್ಲಿ ಹರಿಯುವ ನೀರು ಬಾವಿ ಸೇರುತ್ತಿದೆ. ಇದರಿಂದ ಗ್ರಾಮದ ಜನ ಉಪಯೋಗಿಸುವ ಬಾವಿಯ ನೀರೂ ಕಲುಷಿತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣದ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಘಟನೆ ನಡೆದಿದೆ. ಇತ್ತೀಚೆಗೆ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಆದರೆ ಗೋಡೆಯ ಒಂದು ಪಾರ್ಶ್ವವನ್ನು ಹಾಗೇ ಬಿಡಲಾಗಿತ್ತು. ಭಾರೀ ಮಳೆಯ ಹಿನ್ನಲೆಯಲ್ಲಿ ಗೋಡೆ ಕುಸಿದು ಬಿದ್ದಿದೆ. ಇದರಿಂದಾಗಿ ಹೂ ಮಾರುತ್ತಿರುವ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿಯಲ್ಲಿ ಅಡಕೆ ತೋಟಕ್ಕೆ ನದಿ ನೀರು ನುಗ್ಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ಎಂಬಲ್ಲಿ ಘಟನೆ ನಡೆದಿದೆ.
ಕಾರಿನ ಮೇಲೆ ಬಿದ್ದ ಮರ:
ಧರ್ಮಸ್ಥಳ — ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ಕನ್ವರೆ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಈ ವೇಳೆ ಸಮೀಪದ ಖಾಸಗಿ ವಿದ್ಯಾಲಯದ ಮೈದಾನದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಯುವಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಿಂದ ಮರವನ್ನು ತುಂಡರಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: