ಮಂಗಳೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಹತ್ಯೆ ಪ್ರಕರಣ: ಮೂವರು ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ

stop rape
08/02/2026

ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಭಾನುವಾರ ಎತ್ತಿಹಿಡಿದಿದೆ.

ಪ್ರಕರಣದ ಹಿನ್ನೆಲೆ: 2021ರ ನವೆಂಬರ್ 21 ರಂದು ಮಂಗಳೂರಿನ ವಾಮಂಜೂರು ಸಮೀಪದ ಟೈಲ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಎಂಟು ವರ್ಷದ ಮಗಳ ಮೇಲೆ ಈ ಭೀಕರ ಕೃತ್ಯ ನಡೆದಿತ್ತು. ಆರೋಪಿಗಳಾದ ಜೈಬನ್ ಆದಿವಾಸಿ (27), ಮುಖೇಶ್ ಸಿಂಗ್ (25) ಮತ್ತು ಮನೀಶ್ ತಿರ್ಕಿ (44) ಬಾಲಕಿಗೆ ಚಾಕೊಲೇಟ್ ಮತ್ತು ನಾಣ್ಯಗಳ ಆಮಿಷ ತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮಗು ಕಿರುಚಾಡದಂತೆ ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು.

ನ್ಯಾಯಾಲಯದ ತೀರ್ಪು: ಈ ಹಿಂದೆ ಮಂಗಳೂರಿನ ವಿಚಾರಣಾ ನ್ಯಾಯಾಲಯವು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು ವೆಂಕಟೇಶ್ ನಾಯಕ್ ಟಿ. ಅವರಿದ್ದ ವಿಭಾಗೀಯ ಪೀಠವು ಕೆಳಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

ಈ ಕೃತ್ಯವು ಅತ್ಯಂತ ಕ್ರೂರವಾಗಿದ್ದು, ಕೇವಲ ಬಾಲಕಿಯ ಮೇಲಷ್ಟೇ ಅಲ್ಲದೆ ಇಡೀ ಸಮಾಜದ ವಿರುದ್ಧದ ಅಪರಾಧವಾಗಿದೆ.  ಇಂತಹ ಪ್ರಕರಣಗಳಲ್ಲಿ ಕಡಿಮೆ ಶಿಕ್ಷೆ ವಿಧಿಸಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ.  ಅಪ್ರಾಪ್ತರ ಮೇಲಿನ ಇಂತಹ ಲೈಂಗಿಕ ದೌರ್ಜನ್ಯಗಳನ್ನು ಕಠಿಣವಾಗಿ ಹತ್ತಿಕ್ಕಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಮೂವರು ಆರೋಪಿಗಳಿಗೆ ಮರಣದಂಡನೆಯ ಜೊತೆಗೆ ತಲಾ 1.20 ಲಕ್ಷ ರೂಪಾಯಿಗಳ ದಂಡವನ್ನೂ ವಿಧಿಸಲಾಗಿದೆ. ಈ ಪ್ರಕರಣದ ನಾಲ್ಕನೇ ಆರೋಪಿ ವಿಚಾರಣೆಯ ವೇಳೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧದ ವಿಚಾರಣೆ ಬಾಕಿ ಉಳಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version