ಕಾವೇರಿ ಕಿಚ್ಚು : ಐಸ್ ತಟ್ಟೆ ತಲೆ ಮೇಲೆ ಹೊತ್ತು ಮೋಸದ ಸರ್ಕಾರ ಎಂದು ಆಕ್ರೋಶ
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಐಸ್ ತಟ್ಟೆ ತಲೆಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಐಸ್ ತಟ್ಟೆ ತಲೆಮೇಲೆ ಹೊತ್ತು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ..ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡು ಒತ್ತಡಕ್ಕೆ ಮಣಿದು, ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ನಮ್ಮ ನೀರಿಗೆ ಅತ್ಯಂತ ತೊಂದರೆ ಉಂಟು ಮಾಡುತ್ತಿದೆ ಇದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸತತವಾಗಿ ಕಳೆದ 38 ದಿನಗಳಿಂದ ವಿನೂತನ ಪ್ರತಿಭಟನೆ ನಡೆಸಿಕೊಂಡು ಬಂದಿದ್ದು ಇಂದು ಕೂಡ ತಲೆಮೇಲೆ ಐಸ್ ತಟ್ಟೆ ಹೊತ್ತು ಸರ್ಕಾರಗಳು ಕರ್ನಾಟಕದ ಜನತೆಯ ತಲೆಮೇಲೆ ಐಸ್ ಹಾಕಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತನ್ನು ತೀಟೆಯನ್ಬು ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನುನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್, ಚಾ.ವೆಂ.ರಾಜ್ ಗೋಪಾಲ್, ನಿಜದ್ವನಿಗೋವಿಂದರಾಜು, ನಂಜುಂಡಶೆಟ್ಟಿ, ಗು.ಪುರುಷೋತ್ತಮ್, ಚಾ.ಹ.ರಾಮು, ತಾಂಡವಮೂರ್ತಿ, ರಾಜಪ್ಪ, ಲಿಂಗರಾಜು, ವೀರಭದ್ರ, ಸೋಮವಾರಪೇಟೆ ಮಂಜು, ಇತರರು ಭಾಗವಹಿಸಿದ್ದರು.




























