ಏಕಕಾಲಕ್ಕೆ ಬಿಬಿಎಂಪಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

lokayukta
04/08/2023

ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು,  ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ದುರಾಡಳಿತದ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದರಿಂದ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಬಿಬಿಎಂಪಿ ಸಿಬ್ಬಂದಿ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದರು ಎಂದು ದೂರುಗಳು ಕೇಳಿಬಂದಿದ್ದವು. ಈ ಹಿನ್ನಲೆ ‌ದಾಳಿ ನಡೆದಿದ್ದು, ದಾಳಿ ವೇಳೆ, ಪಾಲಿಕೆ ಕಚೇರಿಗಳಲ್ಲಿ ದಾಖಲೆ ಇರದ ನಗದು ಮತ್ತು ಹಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಪೂರ್ವ, ಬೊಮ್ಮನಹಳ್ಳಿ, ಯಲಹಂಕ, ಮಹದೇವಪುರ, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ವಿಜಯನಗರ, ಬಸವನಗುಡಿ, ರಾಜರಾಜೇಶ್ವರಿ ನಗರ, ಯಶವಂತಪುರ ಮತ್ತು ದಾಸರಹಳ್ಳಿಯ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕಂದಾಯ ಮತ್ತು ಪಟ್ಟಣ ಯೋಜನಾ ಕಚೇರಿಗಳ ಸಿಬ್ಬಂದಿ ಯಾವುದೇ ಪ್ರಮಾಣ ಪತ್ರ ನೀಡಬೇಕಿದ್ದರೂ 50 ಸಾವಿರ ರೂ. ಗೂ ಹೆಚ್ಚು ಲಂಚಕ್ಕೆ ಬೇಡಿಕೆಯಿಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಖಾತೆ ವರ್ಗಾವಣೆ, ಖಾತೆ ನೋಂದಣಿ, ಕಟ್ಟಡಗಳಿಗೆ ಪರವಾನಗಿ, ಪ್ರಾರಂಭಿಕ ಪ್ರಮಾಣ ಪತ್ರ, ವಾಣಿಜ್ಯ ಪರವಾನಗಿ, ಜನನ ಮತ್ತು ಮರಣ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ನೀಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ.

ಬಿಬಿಎಂಪಿ ಸಿಬ್ಬಂದಿ ವಿರುದ್ಧ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

13 ನ್ಯಾಯಾಂಗ ಅಧಿಕಾರಿಗಳು, 7 ಪೊಲೀಸ್ ವರಿಷ್ಠಾಧಿಕಾರಿಗಳು, 19 ಉಪ ಪೊಲೀಸ್ ವರಿಷ್ಠಾಧಿಕಾರಿಗಳು, 26 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ಹಲವು ಪೊಲೀಸರು ಈ ಕಾರ್ಯಾಚರಣೆಯ ಭಾಗವಾಗಿದ್ದರು.ಕರ್ನಾಟಕ ಲೋಕಾಯುಕ್ತದ ಡಿಜಿಪಿ ಮತ್ತು ಐಜಿಪಿ ಮೇಲ್ವಿಚಾರಣೆಯಲ್ಲಿ ದಾಳಿ ನಡೆಸಲಾಗಿದೆ.

ನಗರದ ಅಕ್ಕಪಕ್ಕದ ಜಿಲ್ಲೆಗಳ ಲೋಕಾಯುಕ್ತ ಕಚೇರಿಯ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.ಹೀಗೆ ಬಿಬಿಎಂಪಿಯ 45ಕ್ಕೂ ಹೆಚ್ಚು ಕಚೇರಿಗಳ ಮೇಲೆ‌ದಾಳಿಯಾಗಿದೆನ್ನಲಾಗಿದೆ. ಹೀಗೆ ಲೋಕಾಯುಕ್ತ ಏಕ ಕಾಲಕ್ಕೆ ದಾಳಿ ನಡೆಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version