ಮಂಗಳೂರು: ಆರಿಫ್ ಕೊಲೆ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ
ಮಂಗಳೂರು: ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದ ಆರಿಫ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಅರ್ಷದ್, ಪುಚ್ಚೆ ನಿಸಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ. ಆರಿಫ್ ಹತ್ಯೆಯ ಪಿತೂರಿ ಮತ್ತು ದಾಳಿಯಲ್ಲಿ ಈ ಮೂವರು ಭಾಗಿಯಾಗಿರುವ ಶಂಕೆಯ ಮೇಲೆ ಪೊಲೀಸರು ಇವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆರೋಪಿ ಅರ್ಷದ್, ಹತ್ಯೆ ಮಾಡಲು ಬಳಸಿದ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ ಬಗ್ಗೆ ಮಾಹಿತಿ ನೀಡುವುದು, ಸಾರಿಗೆ ವ್ಯವಸ್ಥೆ ಮತ್ತು ಹಣಕಾಸಿನ ನೆರವು ನೀಡಿದ್ದ ಎನ್ನಲಾಗಿದೆ.
ಆರೋಪಿ ಪುಚ್ಚೆ ನಿಸಾಕ್ ಈತ ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಆರಿಫ್ ಮೇಲೆ ನಡೆದಿದ್ದ ಕೊಲೆ ಯತ್ನ ಹಾಗೂ 2022ರಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲೂ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಇನ್ನೂ ಮತ್ತೊಬ್ಬ ಆರೋಪಿ ಜುನೈದ್ ಆರೋಪಿಗಳಿಗೆ ಕೃತ್ಯ ಎಸಗಲು ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದ ಎನ್ನಲಾಗಿದೆ.
ಫೆಬ್ರವರಿಯಲ್ಲಿ ನಡೆದಿದ್ದ ಆರಿಫ್ ಕೊಲೆ ಯತ್ನದ ತಂಡದಲ್ಲೂ ಈ ಮೂವರು ಸಕ್ರಿಯರಾಗಿದ್ದರು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























