ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ತನಿಖೆಗೆ ವಿಶೇಷ ತಂಡ ರಚನೆಗೆ ಗೃಹ ಸಚಿವರಿಗೆ DSS ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಮತೀಯ ಹಾಗೂ ಪ್ರತಿರೋಧದ ಕಾರಣಗಳಿಗಾಗಿ ನಡೆದಿರುವ ಎಲ್ಲಾ ಹತ್ಯೆಗಳನ್ನು ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದೆ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಗೃಹ ಸಚಿವರ ಜೊತೆಗೆ ಗಂಭೀರವಾದ ಚರ್ಚೆ ನಡೆಸಿತು.
ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ದ.ಕ. ಜಿಲ್ಲೆಯನ್ನು ಕೆಲವೊಂದು ಕೋಮುವಾದಿ ಮನಸ್ಥಿತಿಯ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಹಾಗೂ ಮತೀಯವಾದಿ ಸಂಘಟನೆಗಳು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕೋಸ್ಕರ ಜನರ ಮನಸ್ಸಿನಲ್ಲಿ ಮತೀಯ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ನಾಗರಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಕೆಡಿಸುತ್ತಿದ್ದು, ಈ ವಿಚಾರವನ್ನು ಸರಕಾರವು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ಮತೀಯ ಹಾಗೂ ಪ್ರತಿರೋಧದ ಕಾರಣಗಳಿಗಾಗಿ ನಡೆದಿರುವ ಎಲ್ಲಾ ಹತ್ಯೆಗಳನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ಈ ಎಲ್ಲಾ ಹತ್ಯೆಗಳ ಹಿಂದಿರುವ ಕಾಣದ ಕೈಗಳು(ಸೂತ್ರದಾರರು) ಹಾಗೂ ಸಂಘಟನೆಗಳನ್ನು ಪತ್ತೆಹಚ್ಚಿ ಕಠಿಣ ಕಾನೂನಿನಡಿ ಶಿಕ್ಷಗೆ ಒಳಪಡಿಸುವ ಮೂಲಕ ಜಿಲ್ಲೆಯಲ್ಲಿ ಶಾಶ್ವತವಾಗಿ ಸಾಮರಸ್ಯವನ್ನು ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಒತ್ತಾಯ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಸಂಘಟನಾ ಸಂಚಾಲಕರಾದ ರಘು ಕೆ. ಎಕ್ಕಾರು, ಕೃಷ್ಣಾನಂದ ಡಿ., ಉಡುಪಿ ಜಿಲ್ಲಾ ಸಂಚಾಲಕರಾದ ರಮೇಶ್ ಕೋಟ್ಯಾನ್, ಸುಹಾಸ್ ಶೆಟ್ಟಿಯಿಂದ ಹತ್ಯೆಗೊಳಗಾದ ಕೀರ್ತಿಯ ತಂದೆ ಸಂಜೀವ ಹಾಗೂ ತಾಯಿ ವನಜಾ, ದಲಿತ ಮುಖಂಡರಾದ ದಿನೇಶ್ ಮೂಳೂರು, ಪ್ರೇಮ್ ಬಲ್ಲಾಳ್ ಬಾಗ್, ಗಣೇಶ್ ಮೂಡಬಿದ್ರಿ ಮುಂತಾದವರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: