ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿ ಮೂವರು ಸಾವು!
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಸತತ ಭಾರೀ ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದ ಪರಿಣಾಮ, ಹೆಂಚಿನ ಛಾವಣಿಯ ಮನೆ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಮಹಿಳೆ ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ದುರಂತವಾಗಿ ಸಾವನ್ನಪ್ಪಿದ್ದಾರೆ.
ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಎಂಬುವವರ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಈ ಕುಟುಂಬವು ಕಳೆದ 20 ವರ್ಷಗಳಿಂದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸವಾಗಿತ್ತು ಎಂದು ತಿಳಿದುಬಂದಿದೆ.
ಆರು ಮಂದಿ ಇದ್ದ ಮನೆ: ಮೂವರ ರಕ್ಷಣೆ
ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಮಣ್ಣು ಮತ್ತು ಹೆಂಚಿನ ಅವಶೇಷಗಳಡಿ ಸಿಲುಕಿದ್ದ ಅಲ್ಕಾ (14), ಅನುಷಾ (11) ಹಾಗೂ ಬಾಲಕೃಷ್ಣ (48) ಅವರನ್ನು ಎನ್ಡಿಆರ್ಎಫ್ ಪಡೆ ಯಶಸ್ವಿಯಾಗಿ ಹೊರತೆಗೆದು, ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದೆ.
ಆದರೆ, ದುರದೃಷ್ಟವಶಾತ್ ತೀವ್ರವಾಗಿ ಮಣ್ಣಿನಡಿ ಸಿಲುಕಿಕೊಂಡಿದ್ದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಯುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಘಟನಾ ಸ್ಥಳಕ್ಕೆ ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























