ಕಸ್ತೂರಿ ರಂಗನ್ ವರದಿ ಖಂಡಿಸಿ ಸುಂಕಸಾಲೆಯಲ್ಲಿ ಬೃಹತ್ ಪ್ರತಿಭಟನೆ
- ವ್ಯಾಪಾರಸ್ಥರಿಂದ ಸ್ವಯಂಪ್ರೇರಿತ ಬೆಂಬಲ: ಅಂಗಡಿ–ಮುಂಗಟ್ಟುಗಳು ಬಂದ್
- ಗ್ರಾಮ ಪಂಚಾಯಿತಿ ಕಚೇರಿ ಬಳಿ ಬಹಿರಂಗ ಸಭೆ ನಡೆಸಿ ಆಕ್ರೋಶ
ಸುಂಕಸಾಲೆ: ವಿವಾದಿತ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ಖಂಡಿಸಿ, ಸುಂಕಸಾಲೆ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಯಿತು. ರಾಣಿ ಜರಿ ಕಾಫಿ ಎಸ್ಟೇಟ್ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು, ಪ್ರಮುಖ ರಸ್ತೆಗಳ ಮೂಲಕ ಸಾಗಿ ಸುಂಕಸಾಲೆ ಗ್ರಾಮ ಪಂಚಾಯಿತಿ ಕಚೇರಿಯನ್ನು ತಲುಪಿತು.
ಸ್ಥಳೀಯ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದರು.
ಗ್ರಾ.ಪಂ. ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಹಿರಂಗ ಸಭೆ ನಡೆಸಿ, ವರದಿಯಿಂದ ಸ್ಥಳೀಯ ರೈತರು ಮತ್ತು ಜನಸಾಮಾನ್ಯರ ಬದುಕಿನ ಮೇಲೆ ಉಂಟಾಗಲಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಮಲೆನಾಡಿನ ಜನ-ಜೀವನವನ್ನು ಅತಂತ್ರಗೊಳಿಸುವ ಈ ವರದಿಯ ಕಠಿಣ ನಿಯಮಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಈ ಹೋರಾಟದ ಮುಖ್ಯ ಉದ್ದೇಶವಾಗಿದೆ.
ಈ ಪ್ರತಿಭಟನೆಯಲ್ಲಿ ಪ್ರಮುಖ ಮುಖಂಡರಾದ ಬಿ.ಪಿ. ಅಶೋಕ್, ಬಿ.ಎಸ್. ಜಯರಾಮ್, ಮಹೇಶ್ ದುರ್ಗದಹಳ್ಳಿ, ಪ್ರವೀಣ್ ಎಂ.ಜಿ., ರವಿ, ಈಶ್ವರ್ ಗೌಡ, ನೇತ್ರ ರತ್ನಾಕರ್ ಹಾಗೂ ಕೃಷ್ಣೇಗೌಡ ಅರಮನೆ ತಲಗೂರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇವರೊಂದಿಗೆ ಆಟೋ ಚಾಲಕರ ಸಂಘ, ಸ್ತ್ರೀಶಕ್ತಿ ಸಂಘಗಳ ಸದಸ್ಯರು ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧ್ವನಿಗೂಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























