1:03 AM Wednesday 10 - December 2025

ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮೋದಿ ಸರ್ಕಾರ ಮುಂದುವರಿಸಿದೆ: ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

siddaramaiah
01/02/2025

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ  2025–26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರೆಸಿದೆ. ‌ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಮತ್ತು ದೂರದೃಷ್ಟಿ ಇಲ್ಲದ ಬಜೆಟ್ ಎಂದು ಟೀಕಿಸಿದರು.

ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಅನೇಕ ಬೇಡಿಕೆಗಳನ್ನು ಇಟ್ಟಿತ್ತು. ನಮ್ಮ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ, ಬಜೆಟ್ ಗಾತ್ರವೂ ಕಡಿಮೆ ಆಗಿದೆ. ಕಳೆದ ಬಾರಿಗಿಂತ 1.04 ಲಕ್ಷ ಕೋಟಿ ಕಡಿಮೆ ಆಗಿದೆ ಎಂದರು.

ತೆರಿಗೆ ಅವರು ಅಂದುಕೊಂಡಷ್ಟು ಸಂಗ್ರಹಿಸಿಲ್ಲ. ಕೇಂದ್ರ ಸರ್ಕಾರ 15,68,936 ಕೋಟಿ ಸಾಲ ಪಡೆಯುತ್ತಿದೆ. 12,70,000 ಕೋಟಿ ರೂ. ಬಡ್ಡಿ ಕಟ್ಟುತ್ತಿದೆ. ಈ ದೇಶದ ಸಾಲದ ಪ್ರಮಾಣ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿ ರೂ.ಗೆ ಏರುತ್ತಿದೆ ಎಂದು ಅವರು ಹೇಳಿದರು.

ಕರ್ನಾಟಕ ಹೆಚ್ಚು ತೆರಿಗೆ ಕಟ್ಟುತ್ತಿರುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿದೆ. ರಾಜಕೀಯ ಕಾರಣಕ್ಕೆ ಬಿಹಾರ, ಆಂಧ್ರ ಪ್ರದೇಶಕ್ಕೆ ಹೆಚ್ಚು ಅನುದಾನ ಸಿಕ್ಕಿದೆ ಎಂದು ಅವರು ಆರೋಪಿಸಿದರು.

ಮೇಕೆದಾಟು, ಭದ್ರಾ ಮೇಲ್ದಂಡೆ, ಕೃಷ್ಣ ಮೇಲ್ದಂಡೆ ಯೋಜನೆ ಯಾವುದಕ್ಕೂ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುತ್ತೇವೆ ಎಂದು ಕಳೆದ ಬಾರಿ ಘೋಷಿಸಿದ್ದರು. ಈವರೆಗೆ ಒಂದೂ ನಯಾಪೈಸೆಯೂ ಬಂದಿಲ್ಲ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version