ಮೊರಾರ್ಜಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್ — ವಾರ್ಡನ್ ಅಮಾನತು

ಚಿಕ್ಕಮಗಳೂರು(Mahanayaka): ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಒಂದೆಡೆ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಲಾಗಿದೆ, ಮತ್ತೊಂದೆಡೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಬಿಸಿಮುಟ್ಟಿಸಲಾಗಿದೆ.
ಪ್ರಕರಣವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ನಡುವೆ ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತು ಮಾಡಲಾಗಿದೆ. ಪ್ರಿನ್ಸಿಪಾಲ್ ರಜನಿ, ವಾರ್ಡನ್ ಸುಂದರ್ ನಾಯಕ್ ಅಮಾನತುಗೊಂಡವರಾಗಿದ್ದಾರೆ. ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅಮಾನತು ಆದೇಶ ಹೊರಡಿಸಿದ್ದಾರೆ.
ಕೊಪ್ಪ ಪಟ್ಟಣದ ಮೋರಾರ್ಜಿ ಶಾಲೆಯಲ್ಲಿ ನಡೆದಿದ್ದ ಆತ್ಮಹತ್ಯೆ ಪ್ರಕರಣ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿತ್ತು. 2023 ಜುಲೈ 27ರಂದು ಅಮೂಲ್ಯ, 2025 ಜೂನ್ 29ರಂದು ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ವಿದ್ಯಾರ್ಥಿನಿಯರು 9ನೇ ತರಗತಿಯವರು. ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು.
ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಹಲವಾರು ಅನುಮಾನಗಳನ್ನು ಹೊರ ಹಾಕಿದ್ದರು. ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಇದರ ನಡುವೆಯೇ ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD