ಮುಸ್ಲಿಂ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ: ಕುಮಾರಸ್ವಾಮಿ ಹೇಳಿಕೆ ವಿರುದ್ಧ ಜಮೀರ್ ಅಹ್ಮದ್ ವಾಗ್ದಾಳಿ

b z zameer ahmed khan
24/09/2023

ಬೆಂಗಳೂರು : ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಇವರು ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಲಿ ಎಂದು ಪ್ರೆಶ್ನೆ ಮಾಡಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್. ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನ ರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ  ನೋಡೋಣ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ. ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ ಆರು  ಸ್ಥಾನ ಬರುತ್ತಿತ್ತು ಎಂದು ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಹೋಗುವ ಸಲುವಾಗಿ ಮುಸ್ಲಿಂ ಮತ ಕೊಡಲಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಜಮೀರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಅಪಾರವಾಗಿ ಗೌರವಿಸುವ  ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಇದ್ದವರು. ಆದರೆ ಕುಮಾರಸ್ವಾಮಿ ತಮ್ಮ ರಾಜಕಾರಣಕ್ಕೆ ಗೌಡರ ತತ್ವ ಸಿದ್ದಾಂತ ಬಲಿ ಕೊಟ್ಟಿದ್ದಾರೆ ಎಂದು ದೂರಿದ್ದಾರೆ.

ಇತ್ತೀಚಿನ ಸುದ್ದಿ

Exit mobile version