ವೃದ್ಧಾಪ್ಯ ವೇತನ, ಮಳೆ ಹಾನಿಗೆ ಪರಿಹಾರ ನೀಡುವ ಯೋಗ್ಯತೆ ಇಲ್ಲ, ನಿಗಮಗಳಿಗೆ ಹಣ ಎಲ್ಲಿಂದ | ಸಿದ್ದರಾಮಯ್ಯ ಪ್ರಶ್ನೆ - Mahanayaka

ವೃದ್ಧಾಪ್ಯ ವೇತನ, ಮಳೆ ಹಾನಿಗೆ ಪರಿಹಾರ ನೀಡುವ ಯೋಗ್ಯತೆ ಇಲ್ಲ, ನಿಗಮಗಳಿಗೆ ಹಣ ಎಲ್ಲಿಂದ | ಸಿದ್ದರಾಮಯ್ಯ ಪ್ರಶ್ನೆ

18/11/2020

ಬೆಂಗಳೂರು: ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಜಾತಿ ಹೆಸರಿನಲ್ಲಿ ನಿಗಮ ಮತ್ತು ಪ್ರಾಧಿಕಾರಗಳ ರಚನೆಗೆ ಬಿಜೆಪಿ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿದ ಅವರು,  ತಮ್ಮ ಸರ್ಕಾರದ ಸಾಧನೆಗಳ ಮೂಲಕ ಚುನಾವಣೆಗಳನ್ನು ಗೆಲ್ಲಲಾಗದ ಬಿಜೆಪಿ ಸರ್ಕಾರ ಜಾತಿ ಹೆಸರಿನಲ್ಲಿ ನಿಗಮ ಮತ್ತು ಪ್ರಾಧಿಕಾರಗಳನ್ನು ರಚಿಸುವಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ ಎಂದು ಟೀಕಿಸಿದರು.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೊರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ