ಸಗಣಿಯಲ್ಲಿ ಹೊಡೆದಾಡಿಕೊಂಡ ಜನರು... ಇದು ಗಡಿನಾಡ ಕನ್ನಡಿಗರ ವಿಶೇಷ ಹಬ್ಬ - Mahanayaka

ಸಗಣಿಯಲ್ಲಿ ಹೊಡೆದಾಡಿಕೊಂಡ ಜನರು… ಇದು ಗಡಿನಾಡ ಕನ್ನಡಿಗರ ವಿಶೇಷ ಹಬ್ಬ

chamarajanagara
16/11/2023

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗಡಿಯಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯ್ತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ.


Provided by

ಜಾತಿ ,ವಯಸ್ಸಿನ ಬೇಧವಿಲ್ಲದೇ ಸಗಣಿಯಾಟ:

ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ , ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮಾರನೆ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ ಸಂಪ್ರದಾಯದಂತೆ ಗೊರೆ ಹಬ್ಬ ಆಚರಿಸಲಾಗಿದೆ. ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗು ಟ್ರಾಕ್ಟರ್ ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕಲಾಗುತ್ತದೆ. ಇದಾದ ನಂತರ ಗ್ರಾಮದ ಹೊಳೆ ದಂಡೆಗೆ ಹೋಗಿ ಇಬ್ಬರು ವ್ಯಕ್ತಿಗಳಿಗೆ ಹುಲ್ಲಿನ ಮೀಸೆ ಗಡ್ಡವನ್ನು ಕಟ್ಟಿ ಹಣೆಗೆ ನಾಮ ಬಳಿದು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಊರ ತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತದೆ. ಹೀಗೆ ಕತ್ತೆಯ ಮೇಲೆ ಕುಳ್ಳರಿಸಿ ಮೆರವಣಿಗೆ ಮಾಡುವವರನ್ನು ಕೊಂಡಕಾರರು ಎನ್ನಲಾಗುತ್ತದೆ. ಕೊಂಡಕಾರ ಎಂದರೆ ಸುಳ್ಳುಗಾರ, ಚಾಡಿಕೋರ ಎಂದರ್ಥ. ಹಿಂದೆ ಸುಳ್ಳು ಹೇಳುವ ವ್ಯಕ್ತಿ ಗ್ರಾಮದ ಜನರಲ್ಲಿ ದ್ವೇಷಾಸೂಯೆ ಮೂಡಿಸಿ ಅಶಾಂತಿಗೆ ಕಾರಣವಾಗಿದ್ದ ಎನ್ನಲಾಗಿದೆ. ಅಂತಹ ವ್ಯಕ್ತಿಗಳಿಗೆ ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎಂಬುದರ ಸಂಕೇತವಾಗಿ ಇಬ್ಬರಿಗೆ ಚಾಡಿಕೋರರ ವೇಷ ಧರಿಸಿ ಕತ್ತೆಯ ಮೇಲೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಸಗಣಿ ರಾಶಿ ಬಳಿ ಗ್ರಾಮದ ಜನ ಜಮಾಯಿಸುತ್ತಾರೆ.

ಆಗ ನೋಡಿ ಶುರುವಾಗುತ್ತೆ ಸಗಣಿಯಾಟ. ಸಗಣಿ ರಾಶಿಯಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೆ ಹೊಡೆದಾಡುತ್ತಾರೆ. ದೊಡ್ಡ ದೊಡ್ಡ ಸಗಣಿ ಮುದ್ದೆಗಳನ್ನು ಮಾಡಿ ಒಬ್ಬರ ಮೇಲೆ ಒಬ್ಬರು ಸಗಣಿ ಮುದ್ದೆಗಳನ್ನು ಎತ್ತಿ ಹಾಕಿ ಖುಷಿ ಪಡುತ್ತಾರೆ.

ನಿಜಕ್ಕೂ ಸಗಣಿಯ ದೊಡ್ಡ ದೊಡ್ಡ ಮುದ್ದೆಗಳನ್ನು ಕಟ್ಟುವ ರೀತಿ, ಅದನ್ನು ಪ್ರಾಯಾಸದಿಂದ ಮೇಲಕ್ಕೆತ್ತಿ ಮತ್ತೊಬ್ಬರ ಮೇಲೆ ಎತ್ತಿ ಹಾಕುವ ದೃಶ್ಯ ನಿಜಕ್ಕು ಎಂತಹವರಲ್ಲು ನಗೆ ತರಿಸುತ್ತದೆ. ಸುಮಾರು ಎರಡು ಗಂಟೆಗಳ ಕಾಲ ನಡೆಯುವ ಈ ಸಗಣಿಯಾಟವನ್ನು ನೋಡಲು ಸುತ್ತಮುತ್ತಲ ಗ್ರಾಮಸ್ಥರು, ಬೇರೆ ಜಿಲ್ಲೆಯ ಜನರೂ ಜಮಾಯಿಸುತ್ತಾರೆ. ಸುತ್ತಲು ನೆರೆಯುವ ಜನರ ಮುಗಿಲು ಮುಟ್ಟುವ ಕಿರುಚಾಟ, ಘೋಷಣೆಗಳು ಗೊರೆ ಕಟ್ಟುವವರ ಉತ್ಸಾಹವನ್ನು ಹಿಮ್ಮಡಿಗೊಳಿಸುತ್ತದೆ.

ಧಾರ್ಮಿಕ ನಂಬಿಕೆ ಸಾರುವ ಹಬ್ಬ:

ಹೀಗೆ ಸಗಣಿಯಿಂದ ಹೊಡೆದಾಡಿದರೆ ಚರ್ಮದ ಕಾಯಿಲೆಗಳು ವಾಸಿಯಾಗುತ್ತವೆ ಎಂಬ ನಂಬಿಕೆಯು ಇದೆ. ಬೀರೇಶ್ವರನಿಗೆ ಹರಕೆ ಹೊತ್ತವರು ಸಹ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಇದರಿಂದ ತಮ್ಮ ಮನದ ಬಯಕೆ ಈಡೇರುತ್ತದೆ ಎಂಬ ನಂಬಿಕೆಯು ಇದೆ. ಈ ಹಬ್ಬ ಆಚರಿಸಲು ಒಂದು ಹಿನ್ನಲೆಯು ಇದೆ. ಹಿಂದೆ ಊರ ಗೌಡರ ಮನೆಯಲ್ಲಿ ಜೀತಕ್ಕಿದ್ದ ವ್ಯಕ್ತಿ ಮಹಾಶಿವಭಕ್ತನಾಗಿದ್ದನಂತೆ. ಆತನ ಮರಣ ನಂತರ ಆತನ ವಿಭೂತಿ, ರುದ್ರಾಕ್ಷಿ ಹಾಗು ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತಂತೆ. ಕಾಲಾನಂತರ ಗೊಬ್ಬರಕ್ಕಾಗಿ ತಿಪ್ಪೆ ಅಗೆಯುತ್ತಿದ್ದಾಗ ಆ ಸ್ಥಳದಲ್ಲಿ ಲಿಂಗವೊಂದು ಉದ್ಭವವಾಗಿರುವುದು ಗೋಚರಿಸಿತು ಎಂಬ ನಂಬಿಕೆಯಿದೆ. ನಂತರ ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ ಅಂದಿನಿಂದ ಪ್ರತಿ ವರ್ಷ ಇಲ್ಲಿ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

ಸಗಣಿಯಾಟದಲ್ಲಿ ಜಾತಿ ಬೇಧ ಹಾಗು ವಯಸ್ಸಿನ ಬೇಧವಿಲ್ಲದೆ ಎಲ್ಲರೂ ಪಾಲ್ಗೊಳ್ಳುತ್ತಾರೆ. ಸಗಣಿಯಾಟಕ್ಕು ಮೊದಲು ದಲಿತ ವ್ಯಕ್ತಿಯೇ ಮೊದಲ ಪೂಜೆ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ. ಹೀಗೆ ಪ್ರತಿ ವರ್ಷ ತಪ್ಪದೆ ಗೊರೆಹಬ್ಬ ಮಾಡುವುದರಿಂದ ಗ್ರಾಮದಲ್ಲಿ ಶಾಂತಿ ನೆಲೆಸುತ್ತದೆ. ಮಳೆಬೆಳೆ ಚನ್ನಾಗಿ ಆಗುತ್ತದೆ ಎಂಬ ನಂಬಿಕೆಯು ಇದೆ. ಮೇಲು ನೋಟಕ್ಕೆ ವಿಚಿತ್ರ ಸಂಪ್ರದಾಯದಂತೆ ಕಂಡು ಬರುವ ಈ ಆಚರಣೆಯ ಹಿಂದೆ ಧಾರ್ಮಿಕ ನಂಬಿಕೆ ಇದೆ.

ಇತ್ತೀಚಿನ ಸುದ್ದಿ