ಚಿಕ್ಕಮಗಳೂರು: ಕೂಲಿ ವಿವಾದ: ಕಾರ್ಮಿಕರ ಮಗುವಿನ ತಲೆಗೆ ಗುಂಡು ಹೊಡೆದ ತೋಟದ ಮಾಲಿಕ! - Mahanayaka

ಚಿಕ್ಕಮಗಳೂರು: ಕೂಲಿ ವಿವಾದ: ಕಾರ್ಮಿಕರ ಮಗುವಿನ ತಲೆಗೆ ಗುಂಡು ಹೊಡೆದ ತೋಟದ ಮಾಲಿಕ!

chikkamagaluru.jpg
25/07/2026

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಉಂಟಾದ ಜಗಳ ತಾರಕಕ್ಕೇರಿ, ಮಾಲೀಕ ನಡೆಸಿದ ಫೈರಿಂಗ್ ನಿಂದಾಗಿ ಅಪ್ರಾಪ್ತ ಮಗುವಿನ ತಲೆಗೆ ಗಂಭೀರ ಗಾಯವಾಗಿರುವ ಆಘಾತಕಾರಿ ಘಟನೆ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಳೆಹಳ್ಳಿ ಗ್ರಾಮದ ತೋಟದ ಮಾಲೀಕ ಜಗದೀಶ್ ಗೌಡ ಎಂಬುವರ ಬಳಿ ಅಸ್ಸಾಂ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ದಿನವೊಂದಕ್ಕೆ 400 ರೂಪಾಯಿ ಕೂಲಿ ನೀಡುವಂತೆ ಕಾರ್ಮಿಕರು ಪಟ್ಟು ಹಿಡಿದಿದ್ದರು. ಆದರೆ ಮಾಲೀಕ ಜಗದೀಶ್ ಗೌಡ, “ಈಗ 350 ರೂಪಾಯಿ ನೀಡುತ್ತೇನೆ, ಬಾಕಿ 50 ರೂಪಾಯಿಯನ್ನು ಆಮೇಲೆ ಕೊಡುತ್ತೇನೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ಒಪ್ಪದ ಕಾರ್ಮಿಕರು, “ಈಗಲೇ 400 ರೂಪಾಯಿ ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇವೆ, ಇಲ್ಲವಾದಲ್ಲಿ ಕೆಲಸ ಮಾಡುವುದಿಲ್ಲ” ಎಂದು ಅಲ್ಲಿಂದ ಹೊರಡಲು ಅನುವಾಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಈ ವೇಳೆ ತೋಟದ ಮಾಲೀಕ ಜಗದೀಶ್ ಗೌಡ ಬಂದೂಕಿನಿಂದ ಗುಂಡು ಹಾರಿದ್ದು, ಪರಿಣಾಮವಾಗಿ ಸ್ಥಳದಲ್ಲಿದ್ದ ಅಪ್ರಾಪ್ತ ಮಗುವಿನ ತಲೆಗೆ ಗುಂಡು ತಾಗಿ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಮಗುವನ್ನು ತಕ್ಷಣವೇ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಮಗುವಿನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ