ರಾಜಕೀಯ ಗಲಾಟೆ: ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ನಡುವಿನ ಜಟಾಪಟಿ ಮತ್ತಷ್ಟು ತೀವ್ರ - Mahanayaka
4:03 PM Wednesday 28 - January 2026

ರಾಜಕೀಯ ಗಲಾಟೆ: ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ನಡುವಿನ ಜಟಾಪಟಿ ಮತ್ತಷ್ಟು ತೀವ್ರ

26/12/2024

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್‌ ನ್ನು ತೆಗೆದುಹಾಕುವ ಗುರಿಯನ್ನು ಎಎಪಿ ಹೊಂದಿದೆ. ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭವಿಷ್ಯವನ್ನು ಹಾಳುಮಾಡಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಅನ್ನುಹೊರಗಿಡಲು ಬಣದ ಇತರ ಮಿತ್ರ ಪಕ್ಷಗಳನ್ನು ಸಂಪರ್ಕಿಸುವ ಯೋಜನೆಯನ್ನು ಎಎಪಿ ನಾಯಕರು ಘೋಷಿಸಿದರು. ಇದು ಉಭಯ ಪಕ್ಷಗಳ ನಡುವಿನ ಉದ್ವಿಗ್ನತೆ ಹೆಚ್ಚಿಸಿದೆ ಮತ್ತು ಇಂಡಿಯಾ ಮೈತ್ರಿಕೂಟವನ್ನು ಮತ್ತಷ್ಟು ದುರ್ಬಲಗೊಳಿಸುವ ಸಾಧ್ಯತೆ ಇದೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನ ಕ್ರಮಗಳು ಇಂಡಿಯಾ ಮೈತ್ರಿಕೂಟದ ಏಕತೆಗೆ ಹಾನಿ ಮಾಡುತ್ತಿವೆ ಎಂದು ಆರೋಪಿಸಿದರು.

“ಹರಿಯಾಣ ಚುನಾವಣೆಯ ಸಂದರ್ಭದಲ್ಲಿ ನಾವು ಕಾಂಗ್ರೆಸ್ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಆದರೂ ಕಾಂಗ್ರೆಸ್ ಬಿಜೆಪಿಯ ಸ್ಕ್ರಿಪ್ಟ್ ಅನ್ನು ಓದುತ್ತಿದೆ ಎಂದು ತೋರುತ್ತಿದೆ. ಅದರ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕಚೇರಿಯಲ್ಲಿ ಅಂತಿಮಗೊಳಿಸಲಾಗಿದೆ” ಎಂದು ಸಿಂಗ್ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕ”ಅಜಯ್ ಮಾಕನ್ ಅರವಿಂದ್ ಕೇಜ್ರಿವಾಲ್ ರನ್ನು ದೇಶವಿರೋಧಿ ಎಂದು ಕರೆಯುವ ಮೂಲಕ ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರೂ ಕೇಜ್ರಿವಾಲ್ ಈಗ ಎಫ್‌ಐಆರ್ ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಯಾವುದೇ ಬಿಜೆಪಿ ನಾಯಕರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಿಸಿಲ್ಲ” ಎಂದು ಸಿಂಗ್ ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ