ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದರು. ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ.
ಮನಮೋಹನ್ ಸಿಂಗ್ ಅವರೊಂದಿಗೆ ನನಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಅವರು ಯಾವಾಗಲೂ ದೇಶಕ್ಕೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನಮೋಹನ್ ಸಿಂಗ್ ಅವರು ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ತಮ್ಮ ಅಮೂಲ್ಯ ಚಿಂತನೆಗಳಿಂದ ಆರು ಬಾರಿ ಈ ಸದನಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೊಗಳಿದ್ದಾರೆ.