‘ದೇವಾಲಯಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ’: ಸಚಿವ ಮಧು ಬಂಗಾರಪ್ಪ
ಬೆಂಗಳೂರು / ಶಿವಮೊಗ್ಗ: ರಾಜ್ಯದ ‘ಕರ್ನಾಟಕ ಪಬ್ಲಿಕ್ ಶಾಲೆಗಳ’ (KPS) ಮೂಲಕ ಎಲ್ ಕೆಜಿಯಿಂದ 12ನೇ ತರಗತಿ (ದ್ವಿತೀಯ ಪಿಯುಸಿ) ವರೆಗೆ ಒಂದೇ ಸೂರಿನಡಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವುದು ರಾಜ್ಯ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ‘ಅಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್’ನ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಲಿಟಿ (CSR) ಉಪಕ್ರಮದಡಿ ₹13.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯ ಹಾಗೂ ಖಾಸಗಿ ಸಂಸ್ಥೆಗಳ ಸಹಭಾಗಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ. ಜನರ ಮನಸ್ಥಿತಿಯಲ್ಲಿ ಬದಲಾವಣೆ ಬರಬೇಕಿದ್ದು, ದೇವಾಲಯಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.
ರಾಜ್ಯಾದ್ಯಂತ ಸಿಎಸ್ ಆರ್ (CSR) ನಿಧಿಯ ನೆರವಿನಿಂದ ಒಟ್ಟು 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬೃಹತ್ ಯೋಜನೆಯನ್ನು ಸರ್ಕಾರ ಕೈಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್ (ADB) ನೆರವಿನಿಂದ ಇನ್ನು 24 ಕೆಪಿಎಸ್ ಶಾಲೆಗಳಿಗೆ ಮಂಜೂರಾತಿ ಸಿಕ್ಕಿದ್ದು, ಜಿಲ್ಲೆಯಲ್ಲಿ ಒಟ್ಟು 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಈ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ / ಅಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದವು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























