9:21 AM Saturday 12 - September 2026

ಕೈಗಾರಿಕಾ ಮಾಲಿನ್ಯ, ಉದ್ಯೋಗ ನಿರಾಕರಣೆ ವಿರೋಧಿಸಿ MRPL ಮುಂಭಾಗ ಪ್ರತಿಭಟನೆ

mrpl
25/01/2023

ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾಗಿರುವ MRPL ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ   ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ. ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮಗಳ ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು  27 ಎಕರೆ ಹಸಿರು ವಲಯ ನಿರ್ಮಿಸುವ ಸರಕಾರಿ ಆದೇಶಂತೆ ಭೂಮಿ ಗುರುತಿಸಲಾಗಿದ್ದರೂ ಕಂಪೆನಿ ಕುಂಟು ನೆಪಗಳನ್ನು ಮುಂದಿಟ್ಟು ಕಾಲಹರಣ ಮಾಡುತ್ತಿದೆ. ಇದರಿಂದ ಜೋಕಟ್ಟೆ, ಕಳವಾರು ಗ್ರಾಮಗಳು ರೋಗಗ್ರಸ್ತಗೊಂಡಿವೆ. ಕಂಪೆನಿಯ ಮಾಲಿನ್ಯದಿಂದ ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ. ಸಮುದ್ರದಲ್ಲಿ ಮೀನುಗಳ ಸಂತತಿ ಕಡಿಮೆಯಾಗುತ್ತಿದೆ. ಕಂಪೆನಿಯ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರನ್ನು ಮುಲಾಜಿಲ್ಲದೆ ಹೊರಗಿಡಲಾಗುತ್ತಿದೆ. ಈ ಕುರಿತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ ತಲೆಯನ್ನೇ ಕೆಡಿಸಿಕೊಳ್ಳುತ್ತಿಲ್ಲ. ಕಂಪೆನಿಯ ಹಿತಗಳ ಕುರಿತು ಹೆಚ್ಚು ಆಸಕ್ತರಾಗಿವ ಬಿಜೆಪಿ ಸಂಸದ ಶಾಸಕರುಗಳಿಗೆ ಜನತೆಗಿಂತ ಕಂಪೆನಿಯ ಗುತ್ತಿಗೆ, ಸಿಎಸ್ಆರ್ ನಿಧಿಯೇ ಹೆಚ್ಚು ಹತ್ತಿರ, ಯುವಜನರ ಉದ್ಯೋಗ, ಮಾಲಿನ್ಯದಂತಹ ಗಂಭೀರ ಪ್ರಶ್ನೆಗಳ ಕುರಿತು ಮಾತಾಡಬೇಕಾದ ಶಾಸಕರುಗಳು ಧರ್ಮದ್ವೇಷದ ಭಾಷಣಗಳನ್ನು ಮಾಡಿ ಯುವಕರನ್ನು ಹಿಂಸೆಗೆ ಪ್ರಚೋದಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು‌.

ಅವರು  ‘ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ’  ಹಸಿರು ವಲಯ ನಿರ್ಮಾಣ, ಪರಿಸರ ಮಾಲಿನ್ಯ ತಡೆಯಲು ಆಗ್ರಹಿಸಿ, ಎಮ್ಆರ್ ಪಿಎಲ್ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಆಗ್ರಹಿಸಿ ಎಮ್ಆರ್ ಪಿಎಲ್ ಪ್ರಧಾನದ್ವಾರದ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿ, ಕಾಂಗ್ರೆಸ್ ಸರಕಾರ ಇದ್ದಾಗ ಪರಿಸರ ಮಾಲಿನ್ಯದಿಂದ ಆಗಿರುವ ಹಾನಿ ಸರಿಪಡಿಸಲು ಆರು ಅಂಶಗಳ ಪರಿಹಾರ ಕ್ರಮ ಜಾರಿಗೊಳಿಸುವಂತೆ ಎಮ್ಆರ್ ಪಿಎಲ್ ಗೆ ಆದೇಶಿಸಿತ್ತು. ನಾನು ಶಾಸಕನಾಗಿದ್ದಾಗ ಪರಿಸರ ಮಾಲಿನ್ಯ ಕಂಡು ಹಿಡಿಯಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿ ತಿಂಗಳು ಇಡೀ ಸುರತ್ಕಲ್ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದೆ. ಈಗಿನ ಶಾಸಕ ಭರತ್ ಶೆಟ್ಟಿ  ಲವ್ ಜಿಹಾದ್, ಮಸೀದಿ ಮಂದಿರ ಅಂತ ಭಾಷಣ ಮಾಡುವುದರಲ್ಲೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಇಂತಹ ಶಾಸಕರಿಂದಾಗಿ ಕಂಪೆನಿಗಳಿಗೆ ಯಾರ ಭಯವೂ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಮಾಜಿ ಉಪಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ಸಾಮಾಜಿಕ ಮುಂದಾಳುಗಳಾದ ಮಂಜುಳಾ ನಾಯಕ್, ಸುಂದರ ಶೆಟ್ಟಿ, ನಾಗರಿಕ ಹೋರಾಟ ಸಮಿತಿಯ ಅಬೂಬಕ್ಕರ್ ಬಾವಾ, ಸಿಲ್ವಿಯಾ ಜೋಕಟ್ಟೆ, ಶೆರೀಫ್ ನಿರ್ಮುಂಜೆ, ಶೇಖರ ನಿರ್ಮುಂಜೆ, ರಾಜು ಜೋಕಟ್ಟೆ, ಚಂದ್ರಶೇಖರ ಜೋಕಟ್ಟೆ, ಸೀತಾರಾಮ ಆಚಾರ್ಯ, ಇಕ್ಬಾಲ್ ಜೋಕಟ್ಟೆ, ಯಮುನಾ ಕೆಂಜಾರು, ಡಿವೈಎಫ್ಐ ಮುಖಂಡರಾದ ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಪ್ರಮೀಳಾ, ಸಲೀಂ ಶ್ಯಾಡೋ, ಸಮರ್ಥ್ ಭಟ್ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು. ಆರಂಭದಲ್ಲಿ ಎಚ್ ಪಿಸಿಎಲ್ ಪ್ರಧಾನ ದ್ವಾರದಿಂದ ಎಮ್ಆರ್ ಪಿಎಲ್ ಪ್ರಧಾನ ದ್ವಾರದವರಗೆ ಬೃಹತ್ ಮೆರವಣಿಗೆ ನಡೆಯಿತು‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version