ಸಂಸದ ಅನಂತ್ ಕುಮಾರ್ ಹೆಗಡೆಗೆ ತೀವ್ರ  ಅನಾರೋಗ್ಯ | ಅಷ್ಟಕ್ಕೂ ಅವರನ್ನು ಕಾಡುತ್ತಿರುವ ಅನಾರೋಗ್ಯ ಏನು? - Mahanayaka
4:12 AM Saturday 18 - October 2025

ಸಂಸದ ಅನಂತ್ ಕುಮಾರ್ ಹೆಗಡೆಗೆ ತೀವ್ರ  ಅನಾರೋಗ್ಯ | ಅಷ್ಟಕ್ಕೂ ಅವರನ್ನು ಕಾಡುತ್ತಿರುವ ಅನಾರೋಗ್ಯ ಏನು?

07/03/2021

ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ  ಅನಾರೋಗ್ಯದ ಹಿನ್ನೆಲೆಯಲ್ಲಿ  ಸಾರ್ವಜನಿಕ ಕಾರ್ಯಕ್ರಮ ಹಾಗೂ  ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶೇಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Provided by

ಕಳೆದ ಕೆಲವು ವರ್ಷಗಳಿಂದ ಸಂಸದ ಅನಂತ್ ಕುಮಾರ್ ಹೆಗಡೆ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಗುಣಮುಖರಾಗುವವರೆಗೆ  ಸಾರ್ವಜನಿಕರ ಭೇಟಿಗೆ ಅವರು ಲಭ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೆ.27ರಂದು ಅನಂತ್ ಕುಮಾರ್ ಹೆಗಡೆ ಮೊಣಕಾಲಿನ ಚಿಕಿತ್ಸೆಗೆ ಒಳಗಾಗಿದ್ದರು. ಮಂಗಳೂರಿನಿಂದ ದೆಹಲಿಗೆ ತೆರಳಿರುವ ಹೆಗಡೆ ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದಲೂ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣದಿಂದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ಬಗ್ಗೆಯೂ ಅವರು ಯೋಚಿಸಿದ್ದರಂತೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನಿಂತು ಗೆದ್ದರೂ ಅವರು ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕಗಳಿಂದ ದೂರವೇ ಇರುತ್ತಿದ್ದರು ಎಂದು ಹೇಳಲಾಗಿದೆ.

ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಹೆಗಡೆ ಅವರಿಗೆ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿದ್ದು, ತಜ್ಞರು ಕಾಲಿನ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಸದ್ಯ ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆದುಕೊಳ್ಳಲು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ