ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷಗಳ ಕೇಂದ್ರ ಸಚಿವರು, ಸಂಸದರು, ದೇವೇಗೌಡರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ತೆರಿಗೆ ಹಂಚಿಕೆಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸುವಂತೆ ರಾಜ್ಯದ ಕೇಂದ್ರ ಸಚಿವರು, ಸಂಸದರು ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುವ ಪ್ರತಿಭಟನೆ ಅಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ವಿವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡ, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಡಿ.ವಿ.ಸದಾನಂದಗೌಡ ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ದಿಲ್ಲಿ ಚಲೋದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.