ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆ ಸಹಿಸುವ ಶಕ್ತಿಯೂ ಇರಬೇಕು: ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ - Mahanayaka

ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆ ಸಹಿಸುವ ಶಕ್ತಿಯೂ ಇರಬೇಕು: ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

suneel kumar
19/08/2022

ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್,  ಇದು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ.  ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತೆ. ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ. ಸಾವರ್ಕರ್ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯ ಸಿದ್ಧವಿಲ್ಲ ಎಂದರು.

ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗಲ್ಲ. ಸಾವರ್ಕರ್ ಫೋಟೋ ಕಂಡರೆ ಆಗಲ್ಲ. ತನ್ನ ನಡವಳಿಕೆ, ಹೇಳಿಕೆ, ಆಡಳಿತದಲ್ಲಿ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ. ಇದನ್ನು ಕರ್ನಾಟಕದ ಜನ ಸಹಿಸುವುದಿಲ್ಲ, ಪ್ರತಿಭಟಿಸುತ್ತಿದ್ದಾರೆ ಎಂದರು.

ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಅಂದರೆ ಇತಿಹಾಸದ ಬಗ್ಗೆ ಅರ್ಧಂಬಂರ್ಧ ತಿಳಿದುಕೊಂಡಿದ್ದಾರೆ ಎಂದರ್ಥ. ಸಾವರ್ಕರ್ ಅಂತಸತ್ವ ತಿಳಿದವರು ಯಾರು ಅವರನ್ನು ಟೀಕಿಸಲು ಸಾಧ್ಯವಿಲ್ಲ.  ಸಿದ್ದರಾಮಯ್ಯನವರೇ ದಯಮಾಡಿ ಅಂಡಮಾನಿನ ಸೆಲ್ಯೂಲರ್ ಜೈಲು ನೋಡಿಕೊಂಡು ಬನ್ನಿ. ಸಮಾಜವಾದಿ ಎಂದು ಹೇಳಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟು ಹಬ್ಬ ಮಾಡುತ್ತೀರಿ. ಸಾವರ್ಕರ್ ಇದ್ದ ಜೈಲನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತೆ. ಅವರು ನಡೆಸಿದ ಹೋರಾಟ ಮತ್ತು ಬ್ರಿಟಿಷರ ಕ್ರೂರತೆ ಯಾವ ರೀತಿ ಇತ್ತು ಅನ್ನೋದು ಗೊತ್ತಾಗುತ್ತದೆ ಎಂದು ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಸಾವರ್ಕರ್ ಭಾವಚಿತ್ರ ಅಳವಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ವಿದ್ಯಮಾನಗಳು ಇನ್ನಷ್ಟು ಜಾಸ್ತಿ ಆಗುತ್ತೆ, ಸಾವರ್ಕರ್ ಈ ದೇಶದ ರಾಷ್ಟ್ರೀಯತೆಯ ಪ್ರತೀಕ, ಸಾವರ್ಕರ್ ಬಗ್ಗೆ ಅವ ಹೇಳನಕಾರಿಯಾಗಿ ಮಾತನಾಡಿದರೆ, ಮೆರವಣಿಗೆಗಳು, ಕಾರ್ಯಕ್ರಮಗಳು, ಬ್ಯಾನರ್ ಗಳು, ಪುತ್ಥಳಿಗಳು ಮುಂದಿನ ದಿನಗಳಲ್ಲಿ ವ್ಯಾಪಕ ಆಗಲಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ