ಸೋನಮ್ ವಾಂಗ್ ಚುಕ್ ಗೆ ಸಿಗದ ರಿಲೀಫ್: ಆಸ್ಪತ್ರೆಗೆ ದಾಖಲಿಸಿರುವ ಸರ್ಕಾರದ ಕ್ರಮ ಎತ್ತಿಹಿಡಿದ ದೆಹಲಿ ಹೈಕೋರ್ಟ್

Sonam Wangchuk.jpg
19/07/2026

ನವದೆಹಲಿ: ಲಡಾಖ್ ಗೆ ಸಾಂವಿಧಾನಿಕ ರಕ್ಷಣೆ ಮತ್ತು ರಾಜ್ಯದ ಸ್ಥಾನಮಾನಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದೆಹಲಿ ಹೈಕೋರ್ಟ್ ರವಿವಾರ ಎತ್ತಿಹಿಡಿದಿದೆ. ಸುದೀರ್ಘ ಉಪವಾಸದಿಂದಾಗಿ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಈ ನಿರ್ಧಾರವು ಪಕ್ಷಪಾತ ಅಥವಾ ಅಕ್ರಮದಿಂದ ಕೂಡಿದ್ದಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಾಂಗ್ ಚುಕ್ ಅವರ ಪತ್ನಿ ಡಾ. ಗೀತಾಂಜಲಿ ಜೆ. ಆಂಗ್ಮೋ ಅವರು ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿ, ತಮ್ಮ ಪತಿಯನ್ನು ಸಫ್ದರ್ ಜಂಗ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಬೇಕು ಅಥವಾ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಕೋರಿದ್ದರು. ಆದರೆ, ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿದ್ದ ಪೀಠವು ಈ ಅರ್ಜಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿತು. ಅಲ್ಲದೆ, ಈ ಕುರಿತು ಮೂರು ದಿನಗಳ ಒಳಗಾಗಿ ಸ್ಥಿತಿಗತಿ ವರದಿ (Status Report) ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ವಾಂಗ್ ಚುಕ್ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ಒಪ್ಪಿಗೆಯ ಮೇರೆಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿರುವುದರಿಂದ ಅವರ ಮೇಲೆ ಯಾವುದೇ ರೀತಿಯ ಬಲವಂತದ ಕ್ರಮ ಜರುಗಿಸಲಾಗಿಲ್ಲ ಎಂದು ಕೋರ್ಟ್ ಹೇಳಿದೆ. ವಾಂಗ್ ಚುಕ್ ಅವರು ಸ್ವತಃ ಆಸ್ಪತ್ರೆಗೆ ದಾಖಲಾಗದ ಕಾರಣ, ಅವರ ಜೀವ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಂಡಿರುವುದು ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ವಿಚಾರಣೆಯ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, “ಕಳೆದ 18 ದಿನಗಳಿಂದ ವಾಂಗ್ ಚುಕ್ ಅವರು ಕಠಿಣ ಹವಾಮಾನದಲ್ಲಿ ಉಪವಾಸ ನಡೆಸುತ್ತಿರುವುದರಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಅವರ ದೇಹದಲ್ಲಿನ ಪೊಟ್ಯಾಸಿಯಮ್ ಮಟ್ಟವು ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಹೀಗೆಯೇ ಉಪವಾಸ ಮುಂದುವರಿದರೆ ಕಿಡ್ನಿ ವೈಫಲ್ಯ, ಕೀಟೋಸಿಸ್ ಮತ್ತು ಹೈಪೋಗ್ಲೈಸೀಮಿಯಾ (ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು) ನಂತಹ ಗಂಭೀರ ಸಮಸ್ಯೆಗಳು ಎದುರಾಗಬಹುದು” ಎಂದು ವೈದ್ಯಕೀಯ ವರದಿಯನ್ನು ಉಲ್ಲೇಖಿಸಿ ಕೋರ್ಟ್ಗೆ ತಿಳಿಸಿದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವಾಂಗ್ ಚುಕ್ ಅವರನ್ನು ಸಫ್ದರ್ ಜಂಗ್ ಆಸ್ಪತ್ರೆಯಿಂದ ಮೇದಾಂತ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕೆಂದು ಕೋರಿದರು. ಆದರೆ, ಸಫ್ದರ್ ಜಂಗ್ ಆಸ್ಪತ್ರೆ ಮತ್ತು ಏಮ್ಸ್ ನ ಹಿರಿಯ ವೈದ್ಯರು ಅವರ ಆರೋಗ್ಯವನ್ನು ಅತ್ಯುತ್ತಮವಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರಿ ವಕೀಲರು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸ್ಥಳಾಂತರಕ್ಕೆ ನಿರಾಕರಿಸಿತು.

ಪ್ರತಿಭಟನಾ ಸ್ಥಳದಿಂದ ವಾಂಗ್ ಚುಕ್ ಅವರನ್ನು ಶನಿವಾರವಷ್ಟೇ ದೆಹಲಿ ಪೊಲೀಸರು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಅವರು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಹಿರಿಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

Exit mobile version