ಅಭಿಮನ್ಯು ಪರಾಕ್ರಮ, ಸೋತು ಶರಣಾದ ಪುಂಡಾನೆ..!! - Mahanayaka

ಅಭಿಮನ್ಯು ಪರಾಕ್ರಮ, ಸೋತು ಶರಣಾದ ಪುಂಡಾನೆ..!!

chamarajanagara
11/01/2023


Provided by

ಚಾಮರಾಜನಗರ: ಜನರ ಮೇಲೆ ದಾಳಿಗೆ ಮುಂದಾಗುತ್ತಿದ್ದ ಹಾಗೂ ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡುತ್ತಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಪುಂಡಾನೆಯನ್ನು ಅಭಿಮನ್ಯು ಅಂಡ್ ಟೀಂ ಸೆರೆ ಹಿಡಿದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಯಶಸ್ವಿಯಾಗಿದ್ದಾರೆ.

ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ರೈತರು ಮಾಡಿಕೊಂಡ ಮನವಿಯ ಹನ್ನೆಲೆಯಲ್ಲಿ 2022 ಡಿ.21 ರಂದು ಮೇಲಾಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಡಿ.30 ರಂದು  ಕಾಡಾನೆ ಸೆರೆಗೆ ಅನುಮತಿ ಪಡೆಯಲಾಗಿತ್ತು. ಆನೆಯ ಚಲನ-ವಲನ ಪರಿಶೀಲಿಸಿ ಜ.8 ರಂದು ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಲಾಗಿತ್ತು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಾಕಾನೆಗಳಾದ ಕೂಂಬಿಂಗ್ ಆಪರೇಷನ್ ಸ್ಪೆಷಲಿಸ್ಟ್ ಅಭಿಮನ್ಯು ಮಹೇಂದ್ರ, ಗಣೇಶ ಮತ್ತು ಭೀಮ ಆನೆಗಳನ್ನು ನಿಯೋಜನೆ ಮಾಡಿಕೊಂಡು ನುರಿತ ಪಶು ವೈಧ್ಯಾಧಿಕಾರಿಗಳಾದ ಡಾ.ಮಿರ್ಜಾವಾಸಿಂ, ಡಾ.ರಮೇಶ್ ಹಾಗೂ ಡಾ. ಮುಜೀಬ್ ರೆಹಮಾನ್ ಹಾಗೂ ಸಹಾಯಕರನ್ನು ಬಳಸಿಕೊಂಡು ಕಾರ್ಯಚರಣೆ ಕೈಗೊಳ್ಳಲಾಗಿತ್ತು.

ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಕಾಡಾನೆಯನ್ನು ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆ ಸಿಕ್ಕ ರೇಡಿಯೋ ಕಾಲರ್ ಅಳವಡಿಸಿರುವ ಪುಂಡಾನೆಯನ್ನು ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಂಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಅಭಿಮನ್ಯು ಪರಾಕ್ರಮದ ನಡುವೆ ಸದ್ಯ ಪುಂಡಾನೆ ಸೋತು ಶರಣಾಗಿದ್ದು ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ