ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಣೆ!
ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾದ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ಮಂಗಳವಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಈ ಕುರಿತು ತಮಿಳುನಾಡು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ರಾಜ್ಯ ಅರಣ್ಯ ಸಚಿವ ಆರ್. ವಿ. ರಂಜಿತ್ಕುಮಾರ್, ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಮಿಳುನಾಡು ಅರಣ್ಯ ಇಲಾಖೆಯಿಂದ ತಲಾ 10 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳವಾರ ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಹನೂರು ಶೂಟೌಟ್ ವಿಷಯ ಪ್ರಸ್ತಾಪವಾಯಿತು. ಆಡಳಿತಾರೂಢ ಡಿಎಂಕೆ (DMK) ಹಾಗೂ ಪ್ರತಿಪಕ್ಷ ಎಐಡಿಎಂಕೆ (AIADMK) ನಾಯಕರು ಈ ವಿಷಯದ ಕುರಿತು ಸದನದಲ್ಲಿ ಧ್ವನಿ ಎತ್ತಿ ಕಳವಳ ವ್ಯಕ್ತಪಡಿಸಿದರು.
ಮೆಟ್ಟೂರು ಜಲಾಶಯ ನಿರ್ಮಾಣದ ಸಮಯದಲ್ಲಿ ಹನೂರು ಪ್ರದೇಶದಲ್ಲಿ ನೆಲೆಸಿದ ಈ ಮೂವರೂ ಮೂಲತಃ ತಮಿಳುನಾಡಿನವರಾಗಿದ್ದು, ಅವರ ಹಿತರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಶಾಸಕರು ಪ್ರತಿಪಾದಿಸಿದರು.
ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳಲ್ಲಿ ಶಂಕಿತರ ಚಪ್ಪಲಿಗಳ ಮೇಲಿದ್ದ ‘ಸ್ಟಿಕರ್’ ಇನ್ನೂ ಹೊರಟುಹೋಗದಿರುವುದನ್ನು ಶಾಸಕರು ಬೆಟ್ಟು ಮಾಡಿ ತೋರಿಸಿ, ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದರು.
ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತಕ್ಷಣವೇ ಸಿಬಿಐ (CBI) ತನಿಖೆಗೆ ಆದೇಶಿಸಬೇಕು ಹಾಗೂ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ತಮಿಳುನಾಡಿನ ಶಾಸಕರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























