ಸಾರಿಗೆ ನೌಕರರ ಮುಷ್ಕರ: ಹಲವೆಡೆ ರಸ್ತೆಗಿಳಿಯದ ಬಸ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಹೀಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳನ್ನೇ ಅವಲಂಬಿಸಿರುವ ಸಾರ್ವಜನಿಕರು ಪರದಾಡುವಂತಾಗಿದೆ.
ಕೆಲಸಗಳಿಗೆ ಹೋಗುವವರು, ಶಾಲಾ ಕಾಲೇಜಿಗೆ ತೆರಳು ವಿದ್ಯಾರ್ಥಿಗಳು ಬಸ್ ಇಲ್ಲದೇ ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ಗಳು ಸಂಚರಿಸುತ್ತಿವೆ. ಏರ್ ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್ ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್ ಗಳನ್ನ ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ. ರಾಜ್ಯಾದ್ಯಂತ 11 ಸಾವಿರ ಬಸ್ ಕೇಳಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನೇ ಇಳಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಹೊಸದಾಗಿ ಸೇರಿದ 85 ಸಿಬ್ಬಂದಿಯನ್ನು ಬಳಸಿ ಚಾಲನೆ ಮಾಡಲು, ಖಾಸಗಿಯಾಗಿ ನೇಮಕವಾದ 100 ಸಿಬ್ಬಂದಿ ಬಳಸಲು ತೀರ್ಮಾನಿಸಲಾಗಿದೆ. ಖಾಸಗಿ ಬಸ್ ಮತ್ತು ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD