₹10 ಲಕ್ಷ ಲಂಚಕ್ಕೆ ಬೇಡಿಕೆ: ₹2 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ವೇಯರ್ಗಳು!
ಚಿಕ್ಕಮಗಳೂರು: ಕೃಷಿ ಜಮೀನು ಸರ್ವೇ ಮಾಡಿ ಸ್ಕೆಚ್ ನೀಡುವುದಕ್ಕಾಗಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರು ತಾಲೂಕಿನ ಇಬ್ಬರು ಸರ್ಕಾರಿ ಸರ್ವೇಯರ್ಗಳು ₹2 ಲಕ್ಷ ಮುಂಗಡ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಸರ್ವೇಯರ್ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಗಳು.
ಚಿಕ್ಕಮಗಳೂರು ನಗರದ ಹೊರವಲಯದ ಇಂದಾವರ ಗ್ರಾಮದ ನಿವಾಸಿ ಧರಣೇಶ್ ಎಂಬುವವರು ತಮ್ಮ ಕೃಷಿ ಜಮೀನಿನ ಸರ್ವೇ ನಡೆಸಿ, ಸ್ಕೆಚ್ ತಯಾರಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಅಧಿಕಾರಿಗಳಾದ ದೊರೆರಾಜ್ ಮತ್ತು ರಂಗನಾಥ್ ಬರೊಬ್ಬರಿ ₹10 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಲಂಚ ನೀಡಲು ಇಷ್ಟವಿಲ್ಲದ ಧರಣೇಶ್ ಅವರು ಈ ಕುರಿತು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಪಕ್ಕಾ ಪ್ಲಾನ್ ಮಾಡಿ ದಾಳಿ ಸಂಘಟಿಸಿದರು.
ತಮ್ಮ ಖಾಸಗಿ ಕಚೇರಿಯಲ್ಲಿ ದೂರುದಾರ ಧರಣೇಶ್ ಅವರಿಂದ ₹2 ಲಕ್ಷ ಮುಂಗಡ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಇಬ್ಬರೂ ಸರ್ವೇಯರ್ಗಳನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ದಾಳಿ: ಚಿಕ್ಕಮಗಳೂರು ಲೋಕಾಯುಕ್ತ ಡಿ.ವೈ.ಎಸ್.ಪಿ.ಪಿ. ತಿರುಮಲೇಶ್ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























