ಏನಿಲ್ಲಾ ಏನಿಲ್ಲಾ ಬಜೆಟ್ ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ: ಬಿಜೆಪಿಯಿಂದ ಪ್ಲೇಕಾರ್ಡ್ ಪ್ರದರ್ಶನಕ್ಕೆ ಯತ್ನ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಬಜೆಟ್ 2024 ಮಂಡಿಸುತ್ತಾ ಮಾತನಾಡಿದ ಸಿಎಂ ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದು ಹೇಳಿದರು.
ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯಿಂದ ಪ್ಲೇಕಾರ್ಡ್ ಪ್ರದರ್ಶನಕ್ಕೆ ಯತ್ನ:
ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್ ಗಳು ಬಿಡಲಿಲ್ಲ.
ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿದೆ. ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದಾರೆ. ‘ಏನಿಲ್ಲಾ ಏನಿಲ್ಲಾ ಬಜೆಟ್ ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್ ಗಳನ್ನು ಬಿಜೆಪಿ ಶಾಸಕರು ತಂದಿದ್ದಾರೆ.