ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ - Mahanayaka

ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ

dalith aikyathe
12/03/2023


Provided by

ಉಡುಪಿ: ಮಲ್ಪೆ ಮಹಾಲಕ್ಷ್ಮೀ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣದ ಆರೋಪಿ ಸೊಸೈಟಿಯ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸ ಸುಬ್ಬಣ್ಣ ಬರೆದ ಡೆತ್ ನೋಟ್ನಲ್ಲಿ ಸಾವಿಗೆ ಬ್ಯಾಂಕ್ ಆಡಳಿತ ಮಂಡಳಿಯ ಒತ್ತಡವೇ ಕಾರಣ ಎಂದು ಹೇಳಿದ್ದಾರೆ. ಅದರಂತೆ ಮೃತರ ಸಹೋದರ ಸುರೇಶ್ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಸೂಕ್ತ ಪೊಲೀಸ್ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ ಕ್ರಮ ತೆಗೆದು ಕೊಳ್ಳಬೇಕು. ಈ ಪ್ರಕರಣದಲ್ಲಿ ರಾಜಕೀಯ ಪ್ರಭಾವ ಬಂದರೂ ಪೊಲೀಸರು ನಿಷ್ಠುರವಾಗಿ ತನಿಖೆ ನಡೆಸಬೇಕು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ನ್ಯಾಯ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಸಮಿತಿಯ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ಮೃತ ಸುಬ್ಬಣ್ಣ ಕುಟುಂಬಕ್ಕೆ ಬ್ಯಾಂಕಿನಿಂದ ಸಿಗಬೇಕಾದ ಎಲ್ಲ ರೀತಿಯ ಪರಿಹಾರ ಕೂಡಲೇ ನೀಡಬೇಕು. ಮೃತರ ಪತ್ನಿಗೆ ಅನುಕಂಪದ ಆಧಾರದಲ್ಲಿ ಸೊಸೈಟಿಯಲ್ಲಿ ಉದ್ಯೋಗ ನೀಡಬೇಕು. ಕಳೆದ ಎರಡು ವರ್ಷಗಳಿಂದ ದಲಿತರಿಗೆ ಮೀಸಲಿರಿಸಿ ರುವ ನಿರ್ದೇಶಕ ಹುದ್ದೆಗೆ ನೇಮಕಾತಿ ಮಾಡಿಲ್ಲ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಜಯನ್ ಮಲ್ಪೆ, ಶೇಖರ ಹೆಜಮಾಡಿ, ಹರೀಶ್ ಮಲ್ಪೆ, ವಾಸುದೇವ ಮುದೂರು, ಪರಮೇಶ್ವರ ಉಪ್ಪೂರು, ಶ್ಯಾಮ್ ಸುಂದರ್ ತೆಕ್ಕಟ್ಟೆ, ವಿಜಯ ಕೋಟ, ಆನಂದ ಬ್ರಹ್ಮಾವರ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ